Dec 16, 2010

ಗರುಡ ಮತ್ತು ಅರುಣ

ಗರುಡ ಮತ್ತು ಅರುಣ ಎಂಬ ಹೆಸರುಗಳನ್ನು ಎಲ್ಲರೂ ಕೇಳಿಯೇ ಇರುತ್ತೇವೆ. ಸಾಮಾನ್ಯವಾಗಿ ಗರುಡಪಕ್ಷಿಯನ್ನು ವಿಷ್ಣುವಿನ ವಾಹನವನ್ನಾಗಿಯೂ ಮತ್ತು ಅರುಣನನ್ನು ಸೂರ್ಯನ ಸಾರಥಿಯನ್ನಾಗಿಯೂ ವರ್ಣಿಸಿರುವುದನ್ನು ಓದಿ, ಕೇಳಿ ತಿಳಿದಿರುತ್ತೇವೆ. ಹಾಗಾದರೆ ಈ ಅರುಣ ಯಾರು ? ಮತ್ತು ಗರುಡಪಕ್ಷಿಗೂ ನಾಗಗಳಿಗೂ (ಹಾವುಗಳು) ವೈರತ್ವವೇಕೆ ?. ಇದಕ್ಕೆ ಸಂಬಂಧಿಸಿದಂತೆ ಗರುಡಪುರಾಣ ಮತ್ತು ಮಹಾಭಾರತದಲ್ಲಿ ಸೊಗಸಾದ ಕತೆಯೊಂದಿದೆ. ಕೆಳಗಿನ ಶಿಲ್ಪಚಿತ್ರವನ್ನು ಗಮನಿಸುತ್ತಾ ಚಿತ್ರದಲ್ಲಿ ಅಡಕವಾಗಿರುವ ಪುರಾಣೋಕ್ತ ವಿವರಣೆಗಳನ್ನು ತಿಳಿಯೋಣ.


ಮೊದಲಿಗೆ, ಅತ್ಯಂತ ಸುಂದರವಾದ ಮೇಲಿನ ಶಿಲ್ಪಕಲಾಚಿತ್ರವನ್ನು ಗಮನಿಸಿದಾಗ ಗರುಡಪಕ್ಷಿಯು ನಾಗಗಳನ್ನು ತನ್ನ ವಶದಲ್ಲಿಟ್ಟುಕೊಂಡಿರುವುದನ್ನು ಗಮನಿಸಬಹುದಾಗಿದೆ. ಈ ಶಿಲ್ಪಚಿತ್ರವು ಸುಮಾರು ೯೦೦ ವರುಷಗಳಷ್ಟು ಪುರಾತನವಾದ ಹೊಯ್ಸಳರ ಕಾಲದ ದೇವಾಲಯವೊಂದರಲ್ಲಿ ಕಂಡುಬಂದಿರುತ್ತದೆ.  ಗರುಡ ಮತ್ತು ನಾಗಗಳ ರಚನೆ , ಶಿಲ್ಪದಲ್ಲಿರುವ ಸಹಜತೆ, ಸೂಕ್ಷ್ಮಕೆತ್ತನೆಗಳನ್ನು ಗಮನಿಸಿದಾಗ ಶಿಲ್ಪಕಾರರಲ್ಲಿ ಇದ್ದಂತಹ ಸಮರ್ಪಣಾ ಮನೋಭಾವ , ತಾಳ್ಮೆ, ಸಂಸ್ಕೃತಿಯ ಅರಿವಿನ ಬಗೆಗೆ ಆಸಕ್ತಿ ಮೂಡುವುದರೊಂದಿಗೆ ಆಶ್ಚರ್ಯವೂ ಆಗುತ್ತದೆ. ಒಂದು ಶಿಲ್ಪ ವಿಗ್ರಹವನ್ನು ಕಡೆಯುವುದರ ಮೂಲಕ ಪುರಾಣದಲ್ಲಿರುವ ವಿಶಿಷ್ಟ ಘಟನೆಯೊಂದನ್ನು ಶಿಲ್ಪಿಯು ಹೇಳಿರುತ್ತಾನೆ. ಆ ಕತೆಯು ಹೀಗೆ ಪ್ರಾರಂಭವಾಗುತ್ತದೆ.

ಚತುರ್ಮುಖ ಬ್ರಹ್ಮನ ಮಗನಾದ ಕಶ್ಯಪಮಹರ್ಷಿಯು ( ಈತ ಬ್ರಹ್ಮರ್ಷಿಯೂ ಆಗಿದ್ದರಿಂದ ’ಕಶ್ಯಪಬ್ರಹ್ಮ’ನೆಂಬ ಉಲ್ಲೇಖವೂ ಕೆಲೆವೆಡೆ ಇದೆ. ವ್ಯತ್ಯಾಸಗಳೂ ಇದೆ.)  ’ದಕ್ಷ’ನ ಹದಿಮೂರು ಮಕ್ಕಳನ್ನು ವಿವಾಹವಾಗುತ್ತಾನೆ. ( ಕೆಲೆವೆಡೆ ’ಇಬ್ಬರು’ ಎಂದಿದೆ). ಅವರ ಹೆಸರುಗಳು ಹೀಗಿವೆ.., ’ಅದಿತಿ, ದಿತಿ, ದನು, ಕಲಾ, ಮುನಿ, ಅನಯೂ, ಕದ್ರು,ಪ್ರಭಾ, ಇರಾ, ಕ್ರೋಧ, ವಿನತ, ಸುರಭಿ ಮತ್ತು ಖಗ’ . ಇವರಲ್ಲಿ ಮುಖ್ಯವಾಗಿ ಅದಿತಿಗೆ ಹನ್ನೆರಡು ಮಕ್ಕಳು ಜನಿಸುತ್ತಾರೆ, ಅವರು ದೈವಾಂಶಮಿಳಿತರಾದ ದ್ವಾದಶ ಆದಿತ್ಯರೆಂದು (೧೨ ಮಂದಿ ಸೂರ್ಯರು !) ಪ್ರಸಿದ್ದರಾಗುತ್ತಾರೆ. ದಿತಿಯ ಮಕ್ಕಳು ದಾನವರೆಂದು ಖ್ಯಾತರಾಗುತ್ತಾರೆ, ಅವರಲ್ಲಿ ಹಿರಣ್ಯಾಕ್ಷ ಮತ್ತು ಹಿರಣ್ಯಕಶ್ಯಪ ಪ್ರಮುಖರು.  ಇರಾ ಎಂಬುವಳು ತರು- ಲತೆಗಳಿಗೆ ತಾಯಿಯೆನಿಸಿಕೊಳ್ಳುತಾಳೆ. ಸುರಭಿಯು ದೈವತ್ವವುಳ್ಳ ಹಸುಗಳಿಗೆ ಜನ್ಮನೀಡುತ್ತಾಳೆ. ಕದ್ರುವಿನ ಮಕ್ಕಳು ನಾಗಗಳು ಮತ್ತು ವಿನತೆಯೆ ಮಕ್ಕಳೇ ಗರುಡ ಮತ್ತು ಅರುಣ.

ಪ್ರಮುಖವಾಗಿ ಕದ್ರು ಮತ್ತು ವಿನತೆಯರಲ್ಲಿ ಸಾಮರಸ್ಯವಿರುವುದಿಲ್ಲ. ಕ್ಷೀರಸಾಗರವನ್ನು ಕಡೆಯುವ ಸಮಯದಲ್ಲಿ   ಹಾಲಾಹಲ, ಕಾಮಧೇನು, ಕಲ್ಪವೃಕ್ಷ ಮತ್ತು ಅಮೃತವು ಹೊರಬಂದಂತೆ ’ಉಚ್ಚೈಶ್ರವಸ್’ ಎಂಬ ಅಪೂರ್ವ ಕುದುರೆಯೂ ಸೃಷ್ಟಿಯಾಗುತ್ತದೆ. ಆದರೆ ಕುದುರೆಯ ಬಣ್ಣದ ವಿಚಾರದಲ್ಲಿ ಕದ್ರುವಿಗೂ ವಿನತೆಗೂ ವಾಗ್ಯುದ್ಧವೇ ನಡೆಯುತ್ತದೆ. ವಿನತೆಯು, ಕುದುರೆಯು ಸಂಪೂರ್ಣ ಬಿಳಿಯಬಣ್ಣದ್ದೆಂದೂ ವಾದಿಸಿದರೆ ಕದ್ರುವು ಕುದುರೆಯ ಅಂಗಗಳಲ್ಲಿ ಕಪ್ಪುಬಣ್ಣವಿದೆ ಎಂದು ವಾದಿಸುತ್ತಾಳೆ. ವಾಸ್ತವದಲ್ಲಿ ಅದು ಶ್ವೇತಕುದುರೆಯೇ ಆಗಿದ್ದರೂ ಸಹಿತ ಕದ್ರುವಿನ ತಾಮಸ ಮನೋಭಾವ ಸೋಲೊಪ್ಪಿಕೊಳ್ಳುವುದಿಲ್ಲ.  ಕಶ್ಯಪ ಮಹರ್ಷಿಯ ಸಮ್ಮುಖದಲ್ಲಿ ವಿವಾದವನ್ನು ಬಗೆಹರಿಸಿಕೊಳ್ಳುವುದು ಮತ್ತು ಸೋತವರು ಗೆದ್ದವರಿಗೆ ಶರಣಾಗಿ ಸೇವಕಿಯಾಗಿರಬೇಕೆಂದು ತೀರ್ಮಾನಿಸಿ ತಮ್ಮ ಕ್ಷೇತ್ರವಾದ ’ಪಾಟಲ’ ಕ್ಕೆ ಬರುತ್ತಾರೆ. ಈ ನಡುವೆ ಇಬ್ಬರೂ ಸಂತಾನಪ್ರಾಪ್ತಿಗಾಗಿ ಚತುರ್ಮುಖ ಬ್ರಹ್ಮನನ್ನು ಕುರಿತು ಪ್ರಾರ್ಥಿಸುತ್ತಾರೆ. ಪ್ರಾರ್ಥನೆಗೆ ಓಗೊಡುವ ಬ್ರಹ್ಮನು ಈರ್ವರಿಗೂ ಯಾವ ಬಗೆಯ ಮಕ್ಕಳು ಬೇಕೆಂದು ಕೇಳುತ್ತಾನೆ. ಕದ್ರುವು ಚತುರರಾದ ಸಾವಿರ ಮಕ್ಕಳು ಬೇಕೆಂದು ಕೇಳಿದಾಗ ಬ್ರಹ್ಮನು ಅಸ್ತು ಎಂದು ಕದ್ರುವಿನ ವಂಶವಾಹಿನಿಯಂತೆ  ಸಾವಿರ ಮೊಟ್ಟೆಗಳನ್ನು ನೀಡುತ್ತಾನೆ. ಇತ್ತ ವಿನತೆಯು, ಬಲಶಾಲಿಗಳೂ. ತೇಜೋವಂತರೂ ಆದ ಇಬ್ಬರೇ ಮಕ್ಕಳು ಸಾಕೆಂದೂ ಮತ್ತು ಅಂತಹ ಮಕ್ಕಳನ್ನು ವಿಷ್ಣುವಿಗೆ ಅರ್ಪಿಸುವೆನೆಂದೂ ಹೇಳಿಕೊಳ್ಳತ್ತಾಳೆ.  ಬ್ರಹ್ಮನು ಆಕೆಗೂ ಎರಡು ಮೊಟ್ಟೆಗಳನ್ನು ನೀಡಿ, ಮೊಟ್ಟೆಯೊಡೆದು ತಾನಾಗೆ ಮಕ್ಕಳು ಹೊರಬರುವವರೆವಿಗೂ ಅದನ್ನು ಮುಟ್ಟಬಾರದೆಂಬ ಸೂಚನೆಯನ್ನೂ ನೀಡುತ್ತಾನೆ. ಸಮಪ್ರಮಾಣದ ಶಾಖದಲ್ಲಿಟ್ಟಿದ್ದರೂ ಕದ್ರುವಿನ ಮೊಟ್ಟೆಗಳು ಒಡೆದು ಸಾವಿರ ನಾಗಗಳು ಹೊರಬರುತ್ತವೆ ಆದರೆ ವಿನತೆಯ ಮೊಟ್ಟೆಗಳು ಫಲಪ್ರದವಾಗುವುದಿಲ್ಲ.  ಸಂತಾನ ಪ್ರಾಪ್ತವಾದ ಹಮ್ಮಿನಲ್ಲಿ ಬೀಗುವ ಕದ್ರುವನ್ನು ಕಂಡಾಗಲೆಲ್ಲ ವಿನತೆಯು ಮರುಗುತ್ತಿರುತ್ತಾಳೆ. ಒಂದು ದಿವಸ ಕಶ್ಯಪ ಮಹರ್ಷಿಯ ಸಮ್ಮುಖದಲ್ಲಿ ಕುದುರೆಯ ಬಣ್ಣದ ನಿಷ್ಕರ್ಷೆಯು ನೆಡೆಯಬೇಕಾಗುವಾಗ , ಕದ್ರುವು ತನ್ನ ಮಕ್ಕಳಾದ ನಾಗಗಳನ್ನು ಕರೆದು ಕುದುರೆಯ ಬಣ್ಣವನ್ನು ಬದಲಿಸಲು ಕೇಳಿಕೊಳ್ಳುತ್ತಾಳೆ. ಅದರಂತೆ ನೆಡೆಯುವ ನಾಗಗಳು ಕುದುರೆಯ ಬಾಲಕ್ಕೆ ಸುತ್ತಿಕೊಂಡು ಬಾಲವನ್ನು ಕಪ್ಪುಬಣ್ಣಕ್ಕೆ ತಿರುಗಿಸಿಬಿಡುತ್ತವೆ. ಈ ವಂಚನೆಯನ್ನು ಅರಿಯದ ವಿನತೆಯು ಸೋತೆನೆಂದು ಒಪ್ಪಿಕೊಂಡು ಕದ್ರುವಿಗೆ ಸೇವಕಿಯಾಗಿ ಇರಲು ಒಪ್ಪಿ ಆಕೆಯ ಸೇವೆಯನ್ನು ಮಾಡುತ್ತಿರುತ್ತಾಳೆ.  ಹಲವು ವರುಷಗಳು ಕಳೆದರೂ ಬ್ರಹ್ಮನಿಂದ ಕೊಡಲ್ಪಟ್ಟ ಮೊಟ್ಟೆಗಳು ಫಲವಾಗದಿರುವುದನ್ನು ಅರಿತ ವಿನತೆಯು ಕುತೂಹಲದಿಂದ ಮೊಟ್ಟೆಗಳನ್ನಿಟ್ಟಿದ್ದ ಕಲಶಗಳ ಸಮೀಪಕ್ಕೆ ಬರುತ್ತಾಳೆ.  ಒಂದು ಕಲಶದ ಮುಸುಕನ್ನು ತೆಗೆದು ನೋಡಿದಾಗ ಅರ್ಧ ರಚಿತ ಶರೀರವೊಂದು ಹೊರಬರುತ್ತದೆ.  ಅಕಾಲದಲ್ಲಿ ಕಲಶವನ್ನು ತೆರೆದಿದ್ದರಿಂದ ಶರೀರವು ಸಂಪೂರ್ಣ ರಚನೆಯಾಗುವುದಿಲ್ಲ. ಆ ಮಗುವಿಗೆ ಸೊಂಟದ ಕೆಳಗಿನ  ಭಾಗಗಳು ಬೆಳವಣಿಗೆಯಾಗುವುದಿಲ್ಲ. ರುಣ ಎಂದರೆ ತೊಡೆ ಎಂಬರ್ಥವಿರುವುದರಿಂದ ಆ ಮಗುವಿಗೆ ಅ-ರುಣ (ಕಾಲು, ತೊಡೆಗಳಿಲ್ಲದವನು, ಕೆಂಪು ಬಣ್ಣದವನು) ಅಥವ ಅರುಣ ಎಂದು ಕರೆದ ವಿನತೆಯು ಅರುಣನನ್ನು ಸೂರ್ಯನಿಗೆ ಸಾರಥಿಯಾಗಿಸುತ್ತಾಳೆ. ( ಆದಿತ್ಯನು ವಿಷ್ಣುವಿನ ಅಂಶವಾಗಿದ್ದಾನೆ. "ಸೂರ್ಯನಾರಾಯಣ" ! ).  ಹೀಗೆ ಸೂರ್ಯನಿಗೆ ಸಾರಥಿಯಾಗುವ ಅರುಣನು ರಕ್ತವರ್ಣದಿಂದ ಪ್ರಕಾಶಿಸಿ ವಿನತೆಗೆ ಕೆಲವು ಸೂಚನೆಗಳನ್ನು ಕೊಡುತ್ತಾನೆ.

                                                                     ಸೂರ್ಯ (ಆದಿತ್ಯ)

ಇನ್ನೊಂದು ಕಲಶವನ್ನು ಫಲಪ್ರದವಾಗುವವರೆವಿಗೂ ತೆರೆಯದಂತೆ ಹೇಳಿ, ಆ ಮಗುವಿನಿಂದಲೇ ವಿನತೆಯ ದಾಸ್ಯವೂ ಮುಗಿಯುತ್ತದೆಂದು ತಿಳಿಸುತ್ತಾನೆ. ಈ ಘಟನೆಯು ನೆಡೆದು ಐದುನೂರು ವರುಷಗಳ ಬಳಿಕ ಇನ್ನೊಂದು ಮೊಟ್ಟೆಯೂ ಒಡೆದು ತೇಜೋಮಯವಾದ, ಬೃಹದಾಕಾರವಾದ, ದೈವತ್ವಗುಣಗಳನ್ನು ಹೊಂದಿದ್ದ ಪಕ್ಷಿರೂಪದ ಮಗುವು ಹೊರಬರುತ್ತದೆ. ವಿನತೆಯು ಆತನಿಗೆ ’ಗರುಡ’ನೆಂದು ಹೆಸರಿಸುತ್ತಾಳೆ. ಗರುಡನಿಗೆ ತನ್ನ ಪೂರ್ವವೃತ್ತಾಂತವನ್ನೆಲ್ಲಾ ಸ್ಮರಿಸಿ ಹೇಳಿದಾಗ ಗರುಡನು ಮತ್ತೊಮ್ಮೆ ಕುದುರೆಯನ್ನು ಪರೀಕ್ಷಿಸುವ ಪಣವನ್ನು ಮುಂದಿಡುತ್ತಾನೆ. ಕಶ್ಯಪ ಮಹರ್ಷಿಯ ಸಮ್ಮುಖದಲ್ಲಿ ಕುದುರೆಯನ್ನು ಬರಮಾಡಿಕೊಂಡು ಪರೀಕ್ಷಿಸಿದಾಗ ಬಾಲವು ಕಪ್ಪಾಗಿರುವುದನ್ನು ಕಂಡು ಗರುಡನು ಕುದುರೆಯ ಬಾಲದಲ್ಲಿ ಅಡಗಿದ್ದ ನಾಗಗಳನ್ನು ಕೈಯಲ್ಲಿ  ಹಿಡಿದು ತರುತ್ತಾನೆ ಮತ್ತು ವಂಚನೆಯನ್ನು ಬಯಲು ಮಾಡುತ್ತಾನೆ.  ಇದರಿಂದ ನಿರಾಶೆಗೊಂಡ ಕದ್ರುವು ವಿನತೆಯ ದಾಸ್ಯವನ್ನು ಕೊನೆಗಾಣಿಸುವ ನಿರ್ಧಾರಕ್ಕೆ ಬರುತ್ತಾಳೆ.   ಆದರೆ ನಾಗಗಳು ವಿನತೆಯನ್ನು ಬಲವಾಗಿ ಹಿಡಿದಿಟ್ಟುಕೊಂಡು ಗರುಡನಿಗೆ ಶರತ್ತನ್ನು ಒಡ್ಡುತ್ತಾರೆ. ದೇವಲೋಕದ ಅಮೃತವನ್ನು ತಂದುಕೊಟ್ಟಲ್ಲಿ ವಿನತೆಯನ್ನು ಬಿಡುಗಡೆಗೊಳಿಸುವುದಾಗಿ ಹೇಳುತ್ತಾರೆ. ಮಾತಿಗೆ ಒಪ್ಪುವ ಗರುಡನು ದೇವಲೋಕಕ್ಕೆ ಹಾರುತ್ತಾನೆ. ಅಮೃತ ದೊರಕಿಸಿಕೊಳ್ಳಲು ಗರುಡನು ಹಲವು ಸಾಹಸಗಳನ್ನು ಕೈಗೊಳ್ಳಬೇಕಾಗುತ್ತದೆ. ಬಿರುಗಾಳಿಯೊಡಗೂಡಿ ಹೊತ್ತಿ ಉರಿಯುತ್ತಿರುವ ಬೆಂಕಿಯನ್ನು ಹಾದುಹೋಗಬೇಕಾದಾಗ ಗರುಡನು ಹಲವು ನದಿಗಳ ನೀರನ್ನು ಕುಡಿದು ಅದರಿಂದ ಬೆಂಕಿಯನ್ನು ನಂದಿಸಿ ಮುಂದುವರಿಯುತ್ತಾನೆ. ಕೊನೆಯಲ್ಲಿ ಬೆಂಕಿಯುಗುಳುವ ಎರಡು ಬೃಹತ್ ಸರ್ಪಗಳನ್ನು ಸೋಲಿಸಿ ಅಮೃತವನ್ನು ಹೊತ್ತುಬರುತ್ತಾನೆ.  ಹೀಗೆ ಅಮೃತವನ್ನು ಕದ್ದು ಹೊತ್ತೊಯ್ಯುತ್ತಿರುವ ಗರುಡನನ್ನು ಕಂಡ ಇಂದ್ರಾದಿಗಳು ಆತನನ್ನು ಅಟ್ಟಿಸಿಕೊಂಡು ಬರುತ್ತಾರೆ. ಆದರೆ ಚಾಣಾಕ್ಷತೆಯಿಂದ ನುಗ್ಗಿ ಬರುವ ಗರುಡನು ’ಪಾಟಲ’ವನ್ನು ತಲುಪಿ ನಾಗಗಳಿಗೆ ಅಮೃತವನ್ನು ಕೊಡುತ್ತಾನೆ. ಅಮೃತ ಕೈಗೆ ಬಂದ ಸಂತಸದಲ್ಲಿ ನಾಗಗಳು ವಿನತೆಯನ್ನು ಬಂಧಮುಕ್ತಗೊಳಿಸುತ್ತಾರೆ. ಆದರೆ , ಅಮೃತವನ್ನು ಕುಡಿಯಬೇಕೆನ್ನುವಷ್ಟರಲ್ಲಿ ಇಂದ್ರಾದಿಗಳು ಬಂದು ಅಮೃತಪಾತ್ರೆಯನ್ನು ಹೊತ್ತೊಯ್ಯುತ್ತಾರೆ. ಇದರಿಂದ ನಾಗಗಳಿಗೆ ಅಮೃತತ್ವವು ಲಭಿಸದಾಗುತ್ತದೆ. ಇಂದ್ರಾದಿಗಳನ್ನು ಕರೆತಂದುದು ಗರುಡನೇ ಎಂಬ ಭಾವವು ನಾಗಗಳಲ್ಲಿ ಉಂಟಾಗಿ ಗರುಡನನ್ನು ದ್ವೇಶಿಸಲಾರಂಭಿಸುತ್ತವೆ. ಅಂತೆಯೇ ಗರುಡನಿಗೂ ನಾಗಗಳ ವಿರುದ್ಧ ದ್ವೇಶವು ಬೆಳೆಯುತ್ತದೆ. ಗರುಡನ ಅಹಾರ ನಾಗಗಳೇ ಆಗುತ್ತವೆ.  ವಿನತೆಯು ಮಾತಿಗೆ ತಪ್ಪದಂತೆ ಗರುಡನನ್ನು ವಿಷ್ಣುವಿಗೆ ನೀಡುತ್ತಾಳೆ. ಮುಂದೆ ಗರುಡನು ವಿಷ್ಣುವಿಗೆ ವಾಹನವಾಗುತ್ತಾನೆ ಮತ್ತು ವಿಷ್ಣುವಿನ ಪ್ರೇರಣೆಯಂತೆ ಗರುಡಪುರಾಣವನ್ನೂ ಪ್ರಕಟಗೊಳಿಸುತ್ತಾನೆ.

ಹೀಗೆ ಪುರಾಣೋಕ್ತ ಕತೆಯೊಂದನ್ನು ಒಂದೇ ಶಿಲ್ಪಕಲಾಕೃತಿಯಲ್ಲಿ ಸಹಜವಾಗಿ ಹಿಡಿದಿಟ್ಟಿರುವ ಕಲೆಗಾರನಿಗೆ, ಶಿಲ್ಪಿಗೆ ಶರಣೆನ್ನಲೇಬೇಕಲ್ಲವೆ ? .

-----------------------------------------------------

ಮನದಮಾತು:

ನಿಮ್ಮೆಲ್ಲರ ಹಾರೈಕೆಗಳಿಂದ ಎಲ್ಲಾ ಕೆಲಸಗಳೂ ಶುಭಪ್ರದವೇ ಆಯಿತು. ಅದಕ್ಕೆ ಧನ್ಯವಾದ. ಸುಮಾರು ಎರಡು ತಿಂಗಳೇ ಅಂದ್ಕೊಳಿ, ಏನೂ ಬರೆಯೋಕೆ ಆಗ್ಲಿಲ್ಲ, ಹಾಗಂತ ನಂಗೇನೂ ಬೇಸರವಿಲ್ಲ. ಒಂದಷ್ಟು ಕೆಲಸಗಳು, ನೆಂಟರಿಷ್ಟರು, ಹರಟೆ, ಪ್ರವಾಸ ಇತ್ಯಾದಿಗಳಲ್ಲಿ ಸಮಯ ಕಳೆದದ್ದು ತಿಳೀಲಿಲ್ಲ.  ಮತ್ತೆ, ಹೇಳಿಕೊಳ್ಳೋದು ಏನಿದೆ ? ಒಂದು ವರ್ಷ ಆಯ್ತು ಬ್ಲಾಗ್ ಅಂತ ಬರೆಯೋಕೆ ಶುರುಮಾಡಿ. ಬರೆದದ್ದು ಬರೀ ಮೂವತ್ತು ಅದೂ ೩೬೫ ದಿನದಲ್ಲಿ. ಬರೆದಷ್ಟಕ್ಕೂ ಮೆಚ್ಚುಗೆಯ ಮಾತುಗಳನ್ನಾಡಿ, ಪ್ರೋತ್ಸಾಹಿಸಿ ಇನ್ನಷ್ಟು ಬರೆಯುವಂತೆ ಪ್ರೇರೇಪಣೆ ನೀಡಿದ್ದು ನೀವು.  ಎಲ್ರಿಗೂ ನಾನು ಕೃತಜ್ಞ.  ಮೂರ್ನಾಲ್ಕು ಕತೆ ಬರೆದಾಗ ಅದಕ್ಕೂ ಬೆನ್ನು ತಟ್ಟಿದೋರು ನೀವು, ಯಾಕೋ ಕತೆಗಳನ್ನೇ ಬರೀಬೇಕು ಅಂತ ಅನ್ನಿಸುತ್ತಾ ಇದೆ. ಮುಂದೆ ಬರೀತೀನಿ.  ಮುಂದಿನ ದಿನಗಳಲ್ಲಿ ಇನ್ನಷ್ಟು ಬರೆಯೋ ಹುಮ್ಮಸ್ಸಿದೆ. ಅದಕ್ಕೂ ನಿಮ್ಮೆಲ್ಲರ ಪ್ರೋತ್ಸಾಹವಿರಲಿ, ಇನ್ನೂ ಒಂದು ವರ್ಷ ಕಳೀಲಿ...ಆಗ ಮತ್ತೆ ಬಂದು ಇದೇ ತರಹ ಜಂಭ ಕೊಚ್ಕೋತೀನಿ.  ಸದ್ಯಕ್ಕೆ ಇಷ್ಟು ಸಾಕು.

------------------------------------------------------

ಕಿಡಿ :

ಶ್ರೀಮಂತ ಶಂಭುಲಿಂಗ ಅಮೇರಿಕೆಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ.
ಎಲ್ಲರೂ ಆಶ್ಚರ್ಯದಿಂದ ಶಂಭುವಿನತ್ತ ನೋಡುವವರೆ .
ಶಂಭು ಧರಿಸಿದ್ದು ಒಂದು ಲಂಗೋಟಿ ಮಾತ್ರ !.
ಕುತೂಹಲ ತಡೆಯಲಾರದೆ ಪುಟುಗೋಸಿಯಲ್ಲಿದ್ದ ಶಂಭುವನ್ನು ಮಹನೀಯನೊಬ್ಬ ಕೇಳಿಯೇ ಬಿಟ್ಟ
"ಸ್ವಾಮಿ, ಇದೇನು ನಿಮ್ಮ ವೇಷ ? ಹೀಗೆಲ್ಲಾ ಬರಬಹುದೆ ? "
ಶಂಭು ನಸುನಕ್ಕಿದ
" ಇದೇ ಒಳ್ಳೆಯದು ಸ್ವಾಮಿ, ಹೇಗೂ ನಿಮ್ಮ ವಿಮಾನನಿಲ್ದಾಣದಲ್ಲಿ ಎಲ್ಲವನ್ನೂ ಬಿಚ್ಚಿಯೇ ಪರೀಕ್ಷಿಸುತ್ತಾರೆ,
ಅದಕ್ಕೆ  ಈ ಲಂಗೋಟಿಯೇ ಬೆಸ್ಟು !!! "

----------------------------------------------------
ವಂದನೆಗಳೊಂದಿಗೆ..









    

Oct 22, 2010

ಪುಟ್ಟ ವಿರಾಮ

ಬ್ಲಾಗೆಂಬ ಸ್ನೇಹಕೂಟದ ಮಿತ್ರರೆಲ್ಲರಿಗೂ ನಮನಗಳು. ಮುಂದಿನ ಮೂರ್ನಾಲ್ಕು ವಾರಗಳು ನಿಮ್ಮೆಲ್ಲರಿಂದ  ದೂರವಿರಬೇಕಾಗಿದೆ. ಕೆಲವು ಶುಭ ಕಾರ್ಯಗಳು ಮತ್ತು ವೈಯಕ್ತಿಕ  ಕಾರ್ಯಕ್ರಮಗಳಲ್ಲಿ ನಾನು ಸಕ್ರಿಯವಾಗಿ ಪಾಲ್ಗೊಳ್ಳಲೇಬೇಕಾಗಿರುವುದರಿಂದ ಓದುವಿಕೆ ಮತ್ತು ಬರವಣಿಗೆಗೆ ತಾತ್ಕಾಲಿಕ ವಿರಾಮ ನೀಡಬೇಕಾಗಿದೆ. ಮತ್ತೆ ಬಂದು ನಿಮ್ಮೆಲ್ಲರ ಬರಹಗಳನ್ನು ಓದುವ ಕಾತುರವಿದೆ. ಇಲ್ಲಿಯವರೆವಿಗೂ ನನ್ನನ್ನು ಪ್ರೀತಿಯಿಂದ ಕರೆದುತಂದ ನಿಮ್ಮೆಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸಿ....ಮತ್ತೆ ಭೇಟಿಯಾಗುತ್ತೇನೆ ಎಂಬ ಆಶಯದೊಂದಿಗೆ ......ಬರುತ್ತೇನೆ.

ಎಲ್ಲರಿಗೂ ಧನ್ಯವಾದಗಳು.

Oct 5, 2010

ಕುಂಟಮ್ಮನ ಸೇತುವೆ -೨






ಮರಿಯಪ್ಪನ ಮಗ ಯಾವಾಗ ಗುಡಿಯೊಳಗೆ ಹೊಕ್ಕಿದನೊ ಆ ಕ್ಷಣದಿಂದಲೆ ಅವನ ಹೆಸರು ’ಪೂಜಾರಿ’ ಎಂದು ಬದಲಾಯಿತು. ತೀರ ಇತ್ತಿಚಿನವರೆವಿಗೂ ಅವನ ನಿಜವಾದ ಹೆಸರೇನೆಂದು ಆತನಿಗೇ ಮರೆತು ಹೋಗುವಷ್ಟು ’ಪೂಜಾರಿ’ ಎಂಬ ಹೆಸರಿಗೆ ಅವನು ಒಗ್ಗಿಹೋಗಿದ್ದ. ಮೊದಮೊದಲು ಗುಡಿಯೊಳಗೆ ಕಾಲಿಟ್ಟಾಗ ’ಪೂಜಾರಿ’ಗೆ ಏನೊಂದೂ ಕಾಣಿಸಲಿಲ್ಲ. ಕತ್ತಲಿಗೆ ಕಣ್ಣುಗಳು ಹೊಂದಿಕೊಂಡ ನಂತರ ಅವನಿಗೆ ಮೊದಲು ಕಂಡಿದ್ದು ಜೇಡನ ಬಲೆಯಿಂದ ಮುಚ್ಚಿಹೋಗಿದ್ದ  ನಾಲ್ಕು ಕೈ ಮತ್ತು ಒಂದೂವರೆ ಕಾಲಿದ್ದ ಪುಟ್ಟ ಕಲ್ಲಿನ ವಿಗ್ರಹ ಮಾತ್ರ . ಗುಡಿಯನ್ನೆಲ್ಲಾ ಸ್ವಚ್ಚಗೊಳಿಸಿದ ನಂತರವೂ ಪೂಜಾರಿಗೆ ಅದು ಯಾವ ದೇವರ ವಿಗ್ರಹವೆಂದು ನಿರ್ಧರಿಸಲಾಗಲಿಲ್ಲ.  ಹಾಗೆ ನಿರ್ಧರಿಸಲಾಗದಿದ್ದುದಕ್ಕೆ ಏನೋ ಆ ವಿಗ್ರಹಕ್ಕೆ ಅತೀಂದ್ರಿಯ ಶಕ್ತಿಯೊಂದಿದೆ ಎಂದು ತನ್ನಷ್ಟಕ್ಕೆ ಅಂದುಕೊಂಡನೆಂದು ತೋರುತ್ತದೆ. ವಿಗ್ರಹದ ನಾಲ್ಕು ಕೈಗಳಲ್ಲಿ ಕ್ರಮವಾಗಿ ಶಂಖ, ಚಕ್ರ, ಗದೆ ಮತ್ತು ಕಮಲದ ಹೂವೊಂದು ಇದ್ದುದನ್ನು ಪೂಜಾರಿ ಗಮನಿಸಿದನು. ಆದರೆ ಪೂಜಾರಿಗೆ ವಿಗ್ರಹದ ಕಾಲಿನದೇ ಸಮಸ್ಯೆಯಾಯಿತು. ಬಲಗಾಲು ಸರಿಯಾಗಿದ್ದರೂ ಎಡಗಾಲು ಮಾತ್ರ ಮಂಡಿಯಿಂದ ಕೆಳಗೆ ಅದೃಷ್ಯವಾಗಿತ್ತು. ಕೈಯಲ್ಲಿ ಕಮಲದ ಹೂವಿದ್ದು ಮೈತುಂಬ ಕಲ್ಲಿನಲ್ಲಿ ರಚಿಸಿದ್ದ ಆಭರಣಗಳಿದ್ದುದರಿಂದ ಪೂಜಾರಿ ’ಆ’ ದೇವರನ್ನು ’ಅಮ್ಮ’ ಎಂದು ಪರಿಗಣಿಸಿದನೆಂದು ತೋರುತ್ತದೆ. ಒಂದೂವರೆ ಕಾಲಿದ್ದುದರಿಂದ ಅಮ್ಮನನ್ನು ’ಕುಂಟಮ್ಮ’ ಎಂದು ಕರೆಯಲು ಪೂಜಾರಿಗೆ ಸುಲಭ ಸಾಧ್ಯವಾಯಿತು. ಹೀಗೆ ಪೂಜಾರಿಯಿಂದ ನಾಮಕರಣಗೊಂಡ ಕುಂಟಮ್ಮದೇವರು ಸೇತುವೆಯ ಕಾರ‍್ಯಾರಂಭಕ್ಕೆ ಅಭಯವನ್ನಿತ್ತಿದ್ದಳು. ಈ ವಿದ್ಯಮಾನಗಳ ನಡುವೆ ಅಲ್ಲಿ ಇನ್ನೊಂದು ಚೋದ್ಯವೂ ನಡೆದಿತ್ತು. ಪೂಜಾರಿ ’ಆ’ ದೇವರನ್ನು ಕುಂಟಮ್ಮ ಎಂದು ಹೆಸರಿಸಿದಾಗ ಅಲ್ಲೇ ನಿಂತಿದ್ದ ಸಂಪತ್ತಯ್ಯಂಗಾರಿ ಮುಸಿ-ಮುಸಿ ನಕ್ಕಿದ್ದ. ಅಯ್ಯಂಗಾರ್ರು ಹಾಗೆ ನಗಲು ಬಲವಾದ ಕಾರಣವೊಂದಿತ್ತು. ಸಂಪತ್ತಯ್ಯಂಗಾರಿಯ ತಾತ ಆಗಾಗ್ಗೆ, ಅವರ ತಾತ ಪೂಜಿಸುತ್ತಿದ್ದ  ’ವಿಷ್ಣು’ ದೇವರ ಕತೆಯೊಂದನ್ನು ಹೇಳುತ್ತಿದ್ದರು. ಆ ಅಂತೆ-ಕಂತೆಗಳ ಕತೆ ಹೀಗಿದೆ...,  ಮಲ್ಲರಳ್ಳಿಯ ಬ್ರಾಹ್ಮಣರ ಕೇರಿಯಲ್ಲಿ ಪುಟ್ಟದಾದ ’ವಿಜಯ ನಾರಾಯಣ’ನ ಗುಡಿಯೊಂದಿತ್ತಂತೆ. ಆ ದೇವರಿಗೆ ನಿತ್ಯಪೂಜೆ ಸಲ್ಲಿಸುತ್ತಿದ್ದುದು ಸಂಪತ್ತಯ್ಯಂಗಾರಿಯ ತಾತನ ತಾತನಂತೆ. ಹಾಗೊಂದು ದಿವಸ ನಿತ್ಯಪೂಜಾದಿಗಳೆಲ್ಲಾ ಸಾಂಗವಾದ ನಂತರ ಇದ್ದಕ್ಕಿದ್ದಂತೆ ಬ್ರಾಹ್ಮಣರಲ್ಲಿ ಜಗಳವೊಂದು ಹುಟ್ಟಿತಂತೆ. ಅಯ್ಯಂಗಾರ್ರು ಸೇರಿದಂತೆ ವೈಷ್ಣವರೆಲ್ಲಾ ಶೈವ ಬ್ರಾಹ್ಮಣರನ್ನು "ಸ್ಮಾರ್ತ ಮುಂಡೆವಾ " ಎಂದು ಜರಿದರಂತೆ. ಸ್ಮಾರ್ತರೇನು ಕಡಿಮೆಯೆ ? "ರೆಕ್ಕಿಲ್ಲ ಪುಕ್ಕಿಲ್ಲ ಗರುಡಯ್ಯಂಗಾರಿ" ಎಂದು ಸಂಪತ್ತುವಿನ ತಾತನ ತಾತನವರನ್ನು ಹೀಯಾಳಿಸಿದರಂತೆ. ಇದೇ ಗಲಾಟೆ ದೊಂಬಿಗೆ ತಿರುಗಿ ಹೊಡೆದಾಟಗಳಾಗಿ ಅದ್ಯಾರೋ ಒಬ್ಬರು ನಾರಾಯಣ ದೇವರ ವಿಗ್ರಹವನ್ನು ಕಿತ್ತೆಸದರಂತೆ. ಆಗ ವಿಗ್ರಹದ ಎಡಗಾಲು ಮುರಿದುಹೋಯಿತಂತೆ. ಇಷ್ಟೆಲ್ಲಾ ರಂಪಾಟಗಳು ಮುಗಿದ ನಂತರ ಎಲ್ಲರಿಗೂ ಜ್ಞಾನೋದಯವಾಗಿ ಭಗ್ನಗೊಂಡ ವಿಗ್ರಹವನ್ನು ಹಾಗೆ ಹಾಳು ಬಿಟ್ಟರೆ ಕೇರಿಗೆ ಒಳ್ಳೆಯದಲ್ಲವೆಂದು ತೀರ್ಮಾನಿಸಿ ಊರ ಹೊರವಲಯದಲ್ಲಿಟ್ಟು ನಾಮ್ಕೆವಾಸ್ತೆ ಪುಟ್ಟ ಗುಡಿಯೊಂದನ್ನು ನಿರ್ಮಿಸಿದರಂತೆ. ಈಗ ಕುಂಟಮ್ಮನಾಗಿ ಪರಿವರ್ತನೆ ಹೊಂದಿದ್ದು ಗತಕಾಲದ ನಾರಾಯಣನ ವಿಗ್ರಹವೆ ಎಂದು ತಿಳಿ ಹೇಳಲು ಸಂಪತ್ತಯ್ಯಂಗಾರಿಯೊಬ್ಬನನ್ನು ಬಿಟ್ಟರೆ ಆ ವಿಚಾರವಾಗಿ ತಿಳಿದವರು ಅಲ್ಲ್ಯಾರೂ ಇರಲಿಲ್ಲ. ನಾರಾಯಣನನ್ನು ಕುಂಟಮ್ಮನೆಂದು ಕರೆದಿದ್ದುದಕ್ಕೇ ಸಂಪತ್ತು ಹಾಗೆ ಮುಸಿ-ಮುಸಿ ನಕ್ಕಿದ್ದು. ಇಷ್ಟಾದರೂ "ನಮ್ಮ" ದೇವರಿಗೆ ಈಗಲಾದರೂ ಪೂಜೆಯಾಗುತ್ತಿದೆಯಲ್ಲಾ ಎಂಬ ಕಾರಣಕ್ಕೆ ಸಂಪತ್ತಯ್ಯಂಗಾರಿಯು ನಾರಾಯಣನ ಇತಿಹಾಸವನ್ನು ಮುಚ್ಚಿಟ್ಟುಬಿಟ್ಟನು.

 ........................................*...................................

ಹಾರೆ, ಗುದ್ದಲಿ, ಪಿಕಾಸಿಯೊಡನೆ ಸನ್ನದ್ದರಾಗಿದ್ದ ಮಲ್ಲರಳ್ಳಿಯ ಜಗಜಟ್ಟಿಗಳಿಗೆ ಮೊದಲು ತಲೆಬಿಸಿಯಾದದ್ದು ಕೆರೆಯಿಂದ ಹರಿದುಬರುತ್ತಿದ್ದ ನೀರನ್ನು ಹಳೆಯ ಸೇತುವೆಯ ಹಿಂದೆಯೇ ಅಡ್ಡಗಟ್ಟಿ ನಿಲ್ಲಿಸಬೇಕೆಂದಾಗ !. ( ಹಳೆಯ ಸೇತುವೆಯು ಮಣ್ಣಿನಲ್ಲಿ ಮುಚ್ಚಿಹೋಗಿದ್ದರೆ ಕೆರೆಯಿಂದ ಹರಿದುಬರುತ್ತಿದ್ದ ಹಳ್ಳದ ನೀರು ಎಲ್ಲಿ ಸಾಗುತ್ತಿತ್ತು ಎಂಬ ಬುದ್ದಿವಂತಿಕೆಯ ಪ್ರಶ್ನೆಯನ್ನು ನೀವು ಕೇಳುವಂತಿಲ್ಲ ! , ಏಕೆಂದರೆ ನೀರಿನ ರಭಸಕ್ಕೆ ಹಳೆಯ ಸೇತುವೆಯ ಕೆಳಭಾಗದಲ್ಲಿ ಕೊರಕಲುಗಳು ಉಂಟಾಗಿ ಹಳ್ಳದ ನೀರು ಬಸಿದು ಹೋಗುತ್ತಿತ್ತು , ಮತ್ತು ಹಿಮ್ಮುಖವಾಗಿಯೂ ಒತ್ತುತ್ತಿತ್ತು ಎಂಬುದನ್ನು ನೀವೆ ಕಲ್ಪಿಸಿಕೊಳ್ಳಬೇಕಾಗುತ್ತದೆ !.)  ಹಾಗೆ ಅಡ್ಡಗಟ್ಟಿದರೆ ಹಳ್ಳದ ಹಿನ್ನೀರು ಅಕ್ಕ-ಪಕ್ಕದ ಹೊಲ-ಗದ್ದೆಗಳಿಗೆಲ್ಲಾ ನುಗ್ಗಿ ಬೆಳೆಹಾನಿಯಾಗುವ ಅಪಾಯವು ತಲೆದೋರುತ್ತಿತ್ತು. ಆದರೆ, ಮರಿಯಪ್ಪನ ಚಾಣಾಕ್ಷ ಬುದ್ದಿ ಮತ್ತೆ ಕೆಲಸ ಮಾಡಿತು. ಹಳೆಯ ಸೇತುವೆಯ ಎರಡೂ ಬದಿಯಲ್ಲಿ ಸಣ್ಣ ಕಾಲುವೆಗಳನ್ನು ತೋಡಿ ಅದರ ಮೂಲಕ ಹಳ್ಳದ ನೀರು ಸೇತುವೆ ದಾಟಿ ಮುಂದಿನ ಹಳ್ಳಕ್ಕೆ ಸೇರುವಂತೆ ಮಾಡುವುದೆಂದು ಉಪಾಯವನ್ನು ಸೂಚಿಸಿದನು. ಹಳ್ಳಿಗರೆಲ್ಲಾ ಮರಿಯಪ್ಪನ ಉಪಾಯಕ್ಕೆ ಸರ್ವಸಮ್ಮತವಾಗಿ ಒಪ್ಪಿದರು ಮತ್ತು ಅವನ ಜಾಣ್ಮೆಗೆ ತಲೆದೂಗಿದರು. ಸಾಬರ ವಸೀಮ್ ಖಾನನಂತೂ "ನಿಮ್ದೂಗೆ ಇಂಜಿನಿಯರ್ ಆಗ್ಬೇಕಿತ್ತು" ಎಂಬ ಬಿರುದನ್ನೂ ಮರಿಯಪ್ಪನಿಗೆ ದಯಪಾಲಿಸಿದನು. ಕೆಲಸ ಸುಗಮವಾಗಿ ಮುಂದುವರಿಯಿತು. ಹದಿನೆಂಟು ವರ್ಷಗಳ ಹಿಂದಿನ ಹಳ್ಳಿಗರ ಕಾರ್ಯಸಾಮರ್ಥ್ಯದ ಬಗೆಗೆ ಪ್ರತ್ಯೇಕವಾಗಿ ಹೇಳುವ ಅವಶ್ಯಕತೆಯೇ ಇಲ್ಲವೆನಿಸುತ್ತದೆ.  ಒಂದು ನಯಾಪೈಸೆಯ ಖರ್ಚಿಲ್ಲದೆ ಸೇತುವೆಯ ನಿರ್ಮಾಣ ಕಾರ್ಯ ಸಾಗಿತ್ತು. ಹಾಳು ಬಿದ್ದಿದ್ದ ಜಮೀನಿಗಳಲ್ಲಿದ್ದ ಫಲವತ್ತಾದ ಮಣ್ಣು ಎತ್ತಿನಗಾಡಿಗಳಲ್ಲಿ ಬಂದು ಬೀಳುತ್ತಿತ್ತು. ದೊಡ್ಡ ದೊಡ್ಡ ಕಲ್ಲುಗಳನ್ನು ಊರ ಹೊರವಲಯದ ಗುಡ್ಡವೊಂದರಿಂದ ಬಂಡಿಗಳಲ್ಲಿ ತರಲಾಗುತ್ತಿತ್ತು. ಇಡೀ ಊರೇ ಒಗ್ಗಟ್ಟಾಗಿ ಕೆಲಸ ಮಾಡುತ್ತಿರುವಂತೆ ತೋರುತ್ತಿತ್ತು. ಹೆಂಗಸರೆಲ್ಲಾ ಕಲೆತು ಸಾಮೂಹಿಕವಾಗಿ ರಾಗಿ ಮತ್ತು ಜೋಳದ ರೊಟ್ಟಿಗಳನ್ನು ತಯಾರಿಸಿ ತರುತ್ತಿದ್ದರು. ಮಧ್ಯಾಹ್ನದ ಊಟಕ್ಕೆ ರಾಗಿ ಮುದ್ದೆಯ ಜೊತೆಗೆ ಮಜ್ಜಿಗೆ ಅಂಬಲಿಯೂ ಸಿದ್ದವಾಗಿರುತ್ತಿತ್ತು.  ನಾಗಯ್ಯ, ವಸೀಮ್ ಖಾನ್ , ಪುಟ್ಸಾಮಿ, ಸಂಪತ್ತಯ್ಯಂಗಾರಿ ಇತ್ಯಾದಿಗಳೆಲ್ಲಾ  ಒಟ್ಟಾಗಿ ಕೂಡಿದ್ದು ಸೇತುವೆಯ ಕಾರ್ಯದಲ್ಲೇ ಎನ್ನಬಹುದು.   ಕೆಲಸದ ನಡುವೆ ವಸೀಮ್ ಖಾನನದು ಏನಾದರೊಂದು ರೇಜಿಗೆ ಇದ್ದೇ ಇರುತ್ತಿತ್ತು. ಮಣ್ಣೊಳಗೆ ಯಾವುದೋ ಒಂದು ಹುಳುವನ್ನು ಕಂಡ ವಸೀಮ್ ಖಾನ್ ಎಲ್ಲರನ್ನೂ ಕರೆದು ಅದನ್ನು ತೋರಿಸಿದ್ದ. ಪುಟ್ಸಾಮಿ ರೇಗಿದ ದ್ವನಿಯಿಂದಲೇ ಕೇಳಿದ್ದ " ಏನ್ಲಾ ಸಾಬಿ ಅದು ನಿಂದು, ಎಂತಾ ಹುಳಲ್ನಾ ಅದು ? " ಎಂದು. ಖಾನ್ ಸಾಹೇಬರು " ಕಂಬಳ್ ಕಾ ವುಳ್ " ಎಂದು ಹೇಳಿದ್ದರು. " ಅಂಗಂದ್ರೆನ್ಲಾ ? " ಎಂದು ನಾಗಯ್ಯ ಕೇಳಿದ್ದಕ್ಕೆ ಪುಟ್ಸಾಮಿ ಮತ್ತೊಮ್ಮೆ ಅವನ ತಲೆಯ ಮೇಲೆ ಕುಟ್ಟಿದ್ದ " ಕಂಬ್ಳೀವುಳಾ ಅಂತ ಕಣಲೇ ಅದು ....ಅವನು ಮಾತಾಡದು ಅಂಗೆಯ..ನೀನು ಸುಮ್ಕೆ ಕೆಲ್ಸ ನೋಡು" ಎಂದು ನಾಗಯ್ಯನನ್ನು ಕೆಲಸಕ್ಕೆ ದಬ್ಬಿದ್ದ. ಹೀಗೆ ಹತ್ತು ಹಲವು ಘಟನೆಗಳು ನಡೆದು ಸತತ ಪರಿಶ್ರಮದಿಂದ ತಿಂಗಳಾಗುವುದರೊಳಗಾಗಿ ಕುಂಟಮ್ಮನ ಸೇತುವೆ ನಿರ್ಮಾಣವಾಗಿ ಸೇತುವೆಯ ಕೆಳಗೆ ಹಳ್ಳದ ನೀರು ಸರಾಗವಾಗಿ ಹರಿಯಲು ಪ್ರಾರಂಭವಾಯಿತು. ಒಗ್ಗಟ್ಟಿನಲ್ಲಿ ಬಲವಿದೆ ಎಂಬುದನ್ನು ಮಲ್ಲರಳ್ಳಿಯ ಜನತೆ ನಿಜವಾಗಿಸಿದ್ದರು.

..................*...........................

ಈ ಹದಿನೆಂಟು ವರ್ಷಗಳಲ್ಲಿ ಕುಂಟಮ್ಮನ ಸೇತುವೆಯ ಕೆಳಗೆ ಸಾಕಷ್ಟು ನೀರು ಹರಿದುಹೋಗಿದೆ. ಸೇತುವೆಯ ಮೇಲ್ಗಡೆಯೂ ಸಹ ಹತ್ತು ಹಲವು ತೆರನಾದ ವಾಹನಗಳು ಸಂಚರಿಸಿವೆ ಮತ್ತು ಸಂಚರಿಸುತ್ತಿವೆ. ಮರಿಯಪ್ಪನಿಗೂ ಈಗ ಎಂಬತ್ತು ವರ್ಷಗಳಾಗಿದೆ. ೬೦ ವರ್ಷದವನಾಗಿದ್ದಾಗ ಇದ್ದ ಚೈತನ್ಯ-ಶಕ್ತಿ ಈಗ ಇಲ್ಲವಾಗಿದೆ. ಕೆಲವು ಆಧುನಿಕ ರೋಗಗಳೂ ಮರಿಯಪ್ಪನನ್ನು ಕಾಡುತ್ತಿವೆ. ಅಂದು ಸೇತುವೆಯ ಕಾರ್ಯದಲ್ಲಿ ತೊಡಗಿದ್ದವರೆಲ್ಲಾ ಇಂದು ತಾವಾಯಿತು ತಮ್ಮ ಕೆಲಸವಾಯಿತು ಎಂದುಕೊಂಡು ತಿಂದುಂಡು ನೆಮ್ಮದಿಯಾಗಿದ್ದಾರೆ. ಕುಂಟಮ್ಮನ ಸೇತುವೆ ಮಾತ್ರ ಅಚಲವಾಗಿ ಸ್ವಲ್ಪವೂ ಹಾಳಾಗದಂತೆ ತನ್ನ ಕಾರ್ಯವನ್ನು ನಿರ್ವಹಿಸುತ್ತಿದೆ. ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಚಾಲಕರು ಮತ್ತು ಇತರರಿಗೆಲ್ಲಾ ಕುಂಟಮ್ಮನೇ ಈಗ ಆರಾಧ್ಯದೇವತೆ. ಆಕೆಯ ಮಹಿಮೆ ಎಲ್ಲೆಲ್ಲೂ ಪಸರಿಸಿರುವುದರಿಂದ ಈಗೀಗ ಕುಂಟಮ್ಮನಿಗೆ ಕುರಿ-ಕೋಳಿಗಳ ಎಡೆಯೂ ನಡೆಯುತ್ತಿದೆ.  ( ಮಂಗಳವಾರ , ಶುಕ್ರವಾರಗಳಂದು ಅಲ್ಲಿ ರಕ್ತದ ಕೋಡಿಯೆ ಹರಿಯುತ್ತದೆಂದು ಯಾರೋ ಮರಿಯಪ್ಪನಿಗೆ ಹೇಳಿದಾಗ , ಆತ ಮುಖ ಕಿವುಚಿಕೊಂಡು ಸುಮ್ಮನಾಗಿದ್ದ !) 

ಅಂದು ಮಲ್ಲರಳ್ಳಿಯಲ್ಲಿ ಹೊಸದಾಗಿ ನಿರ್ಮಾಣಗೊಂಡಿದ್ದ ವಿದ್ಯುತ್ ಪ್ರಸರಣ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವಿತ್ತು. ಟೇಪು ಕತ್ತರಿಸಲು ಮಾನ್ಯ ಶಾಸಕರು ಬರುವವರಿದ್ದರು. ಅನ್ಯಕಾರ್ಯ ನಿಮಿತ್ತ ತುಸು ತಡವಾಗಿ ಆಗಮಿಸಿದ ಶಾಸಕರು ಅವಸರದಲ್ಲಿ ಟೇಪು ಕತ್ತರಿಸಿ ಒಂದರ್ಧಗಂಟೆ ಭಾಷಣ ಬಿಗಿದು ಕಟ್ಟೇಪುರಕ್ಕೆ ಹೋಗಲು ಕಾರು ಹತ್ತಿದರು. ಕುಂಟಮ್ಮನ ದುರಾದೃಷ್ಟವೋ ಏನೋ ಮಾನ್ಯರ ಕಾರು ಕುಂಟಮ್ಮನ ಸೇತುವೆಯ ಸನಿಹದಲ್ಲೇ ಅಪಘಾತಕ್ಕೀಡಾಯಿತು. ಮಾನ್ಯರಿಗೆ ಸಣ್ಣ-ಪುಟ್ಟ ತರಚಿದ ಗಾಯಗಳಾಯಿತು. ಮಾನ್ಯರ ಮುದ್ದಿನ ನಾಯಿಯೊಂದು ಸ್ಥಳದಲ್ಲೇ ಅಸುನೀಗಿತು. ಕಾರಿನ ಮುಂಭಾಗ ನುಜ್ಜು-ಗುಜ್ಜಾಯಿತು. ಕುಂಟಮ್ಮನ ಗುಡಿಗೂ ತುಸು ಹಾನಿಯಾಯಿತು. ಶಾಸಕರ ಕೋಪ ನೆತ್ತಿಗೇರಿತೆಂದೇ ಅನಿಸುತ್ತದೆ, ಮಾರನೆಯ ದಿವಸವೆ ಕುಂಟಮ್ಮನ ಸೇತುವೆಯನ್ನು ಕೆಡವಿ ಮರು ನಿರ್ಮಿಸಬೇಕೆಂಬ ಆದೇಶವೊಂದು ಮಲ್ಲರಳ್ಳಿಯ ಪಂಚಾಯಿತಿ ಕಚೇರಿಗೆ ಬಂದು ತಲುಪಿತು. ಸೇತುವೆಯ ಜೊತೆಗೆ ಕುಂಟಮ್ಮನ ಗುಡಿಯನ್ನೂ ಕೆಡವಬೇಕೆಂದು ಆದೇಶದಲ್ಲಿ ಉಲ್ಲೇಖಿಸಲಾಗಿತ್ತು. ( ಕುಂಟಮ್ಮನ ದೆಸೆಯಿಂದಲೇ ಶಾಸಕರಿಗೆ ಅಪಘಾತವಾಗಿದ್ದೆಂದೂ ಆದ ಕಾರಣ ಆ ಗುಡಿಯನ್ನೇ ಅಲ್ಲಿಂದ ತೆಗೆಸಬೇಕೆಂದು ಶಾಸಕರಿಗೆ ದೊಡ್ಡ ಪಟ್ಟಣದ ಖ್ಯಾತ ಜ್ಯೋತಿಷಿಯೊಬ್ಬರು ಹೇಳಿದರೆಂದು ಗುಸು-ಗುಸು ಸುದ್ದಿಯೂ ಹಬ್ಬಿತ್ತು !.)  ಈ ಮರು ನಿರ್ಮಾಣಕಾರ್ಯಕ್ಕೆ ಅದೆಷ್ಟೋ ಕೋಟಿ ರೂಗಳ ಅನುದಾನವು ಮಾನ್ಯ ಶಾಸಕರ ಮೂಲಕ ಬರುತ್ತದೆಯೆಂದು ಆದೇಶದಲ್ಲಿ ಹೇಳಲಾಗಿತ್ತು.  ತ್ವರಿತವಾಗಿ ಕೋಟಿ-ಕೋಟಿ ರೂಗಳ ಯೋಜನೆ ಜಾರಿಯಾಯಿತು. ಯಂತ್ರಗಳು ಬಂದು ಕೆಲವೆ ಗಂಟೆಗಳಲ್ಲಿ ಸೇತುವೆಯನ್ನೂ, ಗುಡಿಯನ್ನೂ ನೆಲಸಮ ಮಾಡಿದವು. ಕುಂಟಮ್ಮನ ವಿಗ್ರಹವನ್ನು ಅಲ್ಲಿಂದಲೂ ಆಚೆಗೆ ಎಸೆಯಲಾಯಿತು.  ಅದೇಕೊ..., ಕೆಡವಿದಷ್ಟು ತ್ವರಿತವಾಗಿ ಸೇತುವೆಯ ನಿರ್ಮಾಣಕಾರ್ಯ ಆಗಲೇ ಇಲ್ಲ.
ಸೇತುವೆಯನ್ನು ಕೆಡವಿದ ನಂತರ ಜನ ಮತ್ತು ವಾಹನಗಳು ಸಂಚರಿಸಲೆಂದು ಸಣ್ಣ ದಾರಿಯೊಂದನ್ನು ನಿರ್ಮಿಸಲಾಯಿತು. ದಿನ ಕಳೆದಂತೆ ಹಳ್ಳ-ದಿಣ್ಣೆಗಳಿಂದ ಕೂಡಿದ್ದ ಆ ದಾರಿಯಲ್ಲಿ ದನ-ಕರುಗಳು ಸಂಚರಿಸುವುದೂ ದುಸ್ತರವಾಯಿತು. ಮಳೆಗಾಲದ ಪಾಡನ್ನಂತೂ ಹೇಳಲು ಸಾಧ್ಯವೆ ಇಲ್ಲ..ನರಕ ಸದೃಶವಾಯಿತು. ಕೋಟಿಗಳು ಖರ್ಚಾದವು, ಹಲವು ಅಧಿಕಾರಿಗಳು ಇಂಜಿನಿಯರುಗಳು ಬಂದು ಹೋದರು...ವರ್ಷಗಳು ಕಳೆದರೂ ಸೇತುವೆ ನಿರ್ಮಾಣವಾಗಲೆ ಇಲ್ಲ. ಕೋಟಿಗಳಲ್ಲಿ ಬಿಡುಗಡೆಯಾದ ಹಣ ನಿರ್ಮಾಣಕಾರ್ಯಕ್ಕೆ ಸಾಲದಾಯಿತಂತೆ ಎಂದು ಊರಿನವರು ಮಾತನಾಡಿಕೊಂಡರು.
ಯಾವುದೂ ಯೋಚನೆಯಲ್ಲಿ ಮುಳುಗಿದ್ದ ಮರಿಯಪ್ಪನಿಗೆ ಸೇತುವೆಯ ಸಮಾಚಾರವನ್ನೆಲ್ಲಾ ಯಾರೋ ಒಬ್ಬರು ಹೇಳಿದರು. ಮರಿಯಪ್ಪನಿಗೆ ಸೇತುವೆಯವರೆವಿಗೂ ನಡೆದು ಹೋಗಿ ಬರುವಷ್ಟು ತ್ರಾಣವಿರಲಿಲ್ಲ. ಬದಲಾಗಿದ್ದ ಮಲ್ಲರಳ್ಳಿಯ ಆಧುನಿಕ ಜನತೆಗೆ ಗತಕಾಲದ ನೆನಪೂ ಇರಲಿಲ್ಲ. ಮರಿಯಪ್ಪ ತನ್ನಷ್ಟಕ್ಕೆ ತಾನೆ ನಕ್ಕಿದ್ದ...ಅವನ ನಗುವಿನ ಅರ್ಥವೇನೆಂದು ಅವನು ಯಾರಿಗೂ ಬಿಡಿಸಿ ಹೇಳಲಿಲ್ಲ ಮತ್ತು ಆಗಾಗ್ಗೆ ಸಣ್ಣಗೆ ನಗುತ್ತಲೇ ಇರುತ್ತಿದ್ದ. ಬಿಡುಗಡೆಯಾಗಿದ್ದ ಕೋಟಿಗಟ್ಟಲೆ ಹಣ ಸಾಲದಾಯಿತೆಂದು ಯಾರೋ ಹೇಳಿದಾಗ ಮರಿಯಪ್ಪ ಮತ್ತೊಮ್ಮೆ ಸಣ್ಣಗೆ ನಕ್ಕಿದ್ದ.
----------*---------

ಮರಿಯಪ್ಪನಿಗೆ ನೆಡೆಯುವ ಶಕ್ತಿಯಿಲ್ಲದಿದ್ದರೂ ಅಂದು ಕಷ್ಟದಿಂದಲೇ ಊರಿನ ಹೊರವಲಯಕ್ಕೆ ನೆಡೆದು ಬಂದಿದ್ದ. ನಿರ್ಮಾಣವಾಗದೆ ಹಾಳು ಬಿದ್ದಿದ್ದ ಸೇತುವೆಯನ್ನೂ ನೋಡಿ ಕಾಲುದಾರಿಯಲ್ಲಿ ಇನ್ನೂ ಮುಂದೆ ನೆಡೆದುಹೋಗಿದ್ದ. ಆ ಸೇತುವೆಯಿಂದ ಮೈಲು ದೂರವೇ ನೆಡೆದುಬಂದಿದ್ದನೆಂದು ಹೇಳಬಹುದು. ಮರಿಯಪ್ಪನ ಕಣ್ಣುಗಳು ರಸ್ತೆಯ ಪಕ್ಕದ ಜಮೀನೊಂದರಲ್ಲಿ ಅನಾಥವಾಗಿ ಬಿದ್ದಿದ್ದ ಕುಂಟಮ್ಮ ದೇವರನ್ನು ಕಂಡವು. ಕುಂಟಮ್ಮನ ಮುಖದಲ್ಲಿ ಅದೇ ಮಂದಹಾಸ ಮಿನುಗುತ್ತಿತ್ತು ಮತ್ತು ಆ ಮಂದಹಾಸ ಮರಿಯಪ್ಪನನ್ನೂ , ಮಲ್ಲರಳ್ಳಿಯ ಇತಿಹಾಸವನ್ನೂ ಅಣಕಿಸುತ್ತಿರುವಂತೆ ಮರಿಯಪ್ಪನಿಗೆ ತೋರಿತು. ಇದಾದ ಎರಡು ದಿನಗಳಲ್ಲಿ ಮರಿಯಪ್ಪ ಸತ್ತನು , ಅವನೊಂದಿಗೆ ಮಲ್ಲರಳ್ಳಿಯ ಜಗಜಟ್ಟಿಗಳ ಇತಿಹಾಸವೂ ಸತ್ತಿತು.
------------*---------------
(ಮುಗಿಯಿತು)

Sep 29, 2010

ಕುಂಟಮ್ಮನ ಸೇತುವೆ

೧೮ ವರುಷಗಳ ಹಿಂದೆ ಅಂತಹ ಜಬರದಸ್ತಾದ ಮಳೆ ಸುರಿಯದೆ ಇದ್ದಿದ್ದರೆ ಇನ್ನೆಂದೂ ಆ ಕೆರೆ ತುಂಬುತ್ತಲೇ ಇರಲಿಲ್ಲವೇನೊ !. ದೊಡ್ಡಕೆರೆ ಎಂದರೆ ಅದು ಬರೀ ದೊಡ್ಡಕೆರೆಯಲ್ಲ, ಇಡೀ ಹಾಸನ ಜಿಲ್ಲೆಗೆ ಅತ್ಯಂತ ವಿಶಾಲವಾದ ಮತ್ತು ಬೃಹತ್ತಾದ ಕೆರೆ ಅದು. ಸಾವಿರ ಎಕರೆಗೂ ಮೀರಿ ಆವರಿಸಿದ್ದ ಕೆರೆಯ ಪಾತ್ರವನ್ನು ಅಕ್ರಮವಾಗಿ ಜಮೀನು ಮಾಡಿಕೊಂಡು  ೯೦೦ ಎಕರೆಗೆ ತಗ್ಗಿಸಿದ ಕೀರ್ತಿ  ’ಮಲ್ಲರ ಹಳ್ಳಿಯ ’ ಜನರಿಗೇ ಸಲ್ಲಬೇಕು. ಮಲ್ಲರಳ್ಳಿ ಎಂದರೆ , ಆ ಊರಿನ ಜನತೆಗೆ ಅದೇನೋ ವಿಚಿತ್ರ ಅಭಿಮಾನವಿತ್ತು. ರಾಜರುಗಳು ಆಳಿದ್ದ ಕಾಲದಲ್ಲಿ ಮಲ್ಲಯುದ್ದ ಪರಿಣತರು, ಜಗಜಟ್ಟಿಗಳೂ ವಾಸಿಸುತ್ತಿದ್ದ ಊರೆಂದು ಅಲ್ಲಿಯ ಜನ ತಾವು ಹೋದೆಡೆಯೆಲ್ಲಾ ಪರಾಕು ಹೊಡೆಯುತ್ತಿದ್ದರು. ತಾವೆಲ್ಲಾ ಅಂತಹ ಜಟ್ಟಿಗಳ ವಂಶಸ್ಥರೆಂದೇ ಅವರಲ್ಲಿ ಬಲವಾದ ನಂಬಿಕೆ ಬೇರೂರಿತ್ತು. ಆ ದೊಡ್ಡಕೆರೆಯ ಮಹಾತ್ಮೆಯನ್ನಂತೂ ಒಬ್ಬಬ್ಬೊರೂ ಒಂದೊಂದು ರೀತಿ ಬಣ್ಣ ಕಟ್ಟಿ ಹೇಳುವುದರಲ್ಲಿ ನಿಷ್ಣಾತರಾಗಿದ್ದರು. ಕೆಲವರು ಒಂಬತ್ತನೆಯ ಶತಮಾನದಲ್ಲಿ ರಾಷ್ಟ್ರಕೂಟರ ಕಾಲದಲ್ಲಿ ಕಟ್ಟಿದ ಕೆರೆಯೆಂದು ಬಣ್ಣಿಸಿದರೆ ಕೆಲವರು ’ಚ್ವಾಳ್ರು’ ಕಟ್ಟಿದ್ದೆಂದೂ ಹೇಳುತ್ತಿದ್ದರು. ಇನ್ನೂ ಕೆಲವರು ಅದು ತನಗೆ ತಾನೇ ಉದ್ಬವಿಸಿದ್ದೆಂದೂ ಹೇಳುತ್ತಾ ಆ ಕೆರೆಗೆ ಅನೇಕ ದೈವೀ ಶಕ್ತಿಗಳನ್ನು ಆರೋಪಿಸುತ್ತಿದ್ದರು. ೧೮ ವರುಷಗಳಿಗಿಂತಲೂ ಹಿಂದೆ ಹಲವು ವರುಷಗಳ ಕಾಲ ದೊಡ್ಡಕೆರೆ ತುಂಬದೆ ಹಾಳು ಬಂಜರು ನೆಲವಾಗಿ ಬಿದ್ದಿತ್ತು. ಆಗ ಹಳ್ಳಿಗರೆಲ್ಲಾ ಕೆರೆಗೆ ಯಾವುದೋ ದಯ್ಯವೋ, ದೇವರೋ ಶಾಪ ಕೊಟ್ಟಿರುವುದರಿಂದ ಬರಗಾಲ ಬಂದಿದೆಯೆಂದು ಪುಕಾರು ಹಬ್ಬಿಸಿಕೊಂಡು ಸುತ್ತೇಳು ಹಳ್ಳಿಗರನ್ನೆಲ್ಲಾ ಸೇರಿಸಿ ಹಾಳು ಕೆರೆಯಲ್ಲೇ ’ಪರ’ ಮಾಡಿ  ಪೊಗದಸ್ತಾಗಿ ತಿಂದುಂಡರು. ಅದರಲ್ಲೂ ಮುಖ್ಯವಾಗಿ ’ಪರ’ ಮಾಡಿದ ದಿವಸ ಕಳಸಾಪುರದ ಸುಬ್ಬಾಭಟ್ಟರ ನೇತೃತ್ವದಲ್ಲಿ ನೆಡೆದ ’ರುದ್ರ ಹೋಮ’ ವಂತೂ ಹಳ್ಳಿಗರಲ್ಲಿ ಯಥೇಚ್ಚವಾಗಿ ಭಯ-ಭಕ್ತಿಯನ್ನು ಉಂಟುಮಾಡಿತ್ತು. ಹಲವು ಬಾರಿ ಭಟ್ಟರು ಎದ್ದು ನಿಂತು ಆಕಾಶದ ಕಡೆ ಎರಡೂ ಕೈ ತೋರಿಸಿ "ಪರ್ಜನ್ಯಾsss" , "ವರುಣಾssss" ಎಂದು ಕಿರುಚಿದಾಗಲೆಲ್ಲಾ ಇನ್ನೇನು ಮಳೆ ಸುರಿದೇ ಹೋಯಿತೇನೋ ಎಂಬಂತೆ ಹಳ್ಳಿಗರೆಲ್ಲಾ ಆಕಾಶ ನೋಡಿದ್ದರು. ಎಲ್ಲರ ಅದೃಷ್ಟ ಖುಲಾಯಿಸಿತೆಂದೆ ಅನಿಸುತ್ತದೆ, ನಂತರದ ಮಳೆಗಾಲದಲ್ಲಿ ಸುರಿದ ಮಳೆ ದೊಡ್ಡಕೆರೆಗೆ ಒಂದಷ್ಟು ನೀರನ್ನೂ ಬಿಟ್ಟುಹೋಗಿತ್ತು. ಹದಿನೆಂಟು ವರುಷಗಳ ಹಿಂದೆ ಸುರಿದ ಭಾರಿ ಮಳೆಯಿಂದಾಗಿ ತುಂಬಿ ಹರಿದ ಕೆರೆ ಮತ್ತೆಂದೂ ಖಾಲಿಯಾಗಲೆ ಇಲ್ಲ. ಪ್ರತೀ ವರ್ಷವೂ ತುಂಬಿ ಹರಿಯುತ್ತಲೆ ಇರುತ್ತದೆ.  ಸುಬ್ಬಾಭಟ್ಟರೂ ಸೇರಿದಂತೆ ಕಾಳೇಗೌಡ, ರಂಗಶೆಟ್ಟಿ, ಹನುಮಯ್ಯ, ನಂಜುಡಪ್ಪ  ಇತ್ಯಾದಿಗಳೆಲ್ಲಾ ಈ ಹದಿನೆಂಟು ವರುಷಗಳ ಕಾಲಾವಧಿಯಲ್ಲಿ ಪರಲೋಕ ಸೇರಿದ್ದರೂ ಅವರ ಸಮಕಾಲೀನರಾಗಿದ್ದೂ ಜೀವಂತವಿದ್ದ ಕೆಲವೇ ಕೆಲವರಲ್ಲಿ ಮುಖ್ಯ ವ್ಯಕ್ತಿಯೆಂದರೆ ಮರಿಯಪ್ಪನೊಬ್ಬನೆ .
  ಮರಿಯಪ್ಪ ಮುಖ್ಯವ್ಯಕ್ತಿ ಎಂದೆನಿಸಿಕೊಳ್ಳಲು ಹಲವು ಕಾರಣಗಳು ಮಲ್ಲರಳ್ಳಿಯಲ್ಲಿ ಉದ್ಭವಿಸಿತು. ೧೮ ವರುಷಗಳ ಹಿಂದೆ ಮೊದಲ ಬಾರಿ ದೊಡ್ಡಕೆರೆಯು ತುಂಬಿ ಕೋಡಿಯಿಂದ ನೀರು ಎಗ್ಗಿಲ್ಲದೆ ಹರಿದು ಹೋಗುವಾಗ , ಅದರ ರಭಸಕ್ಕೆ ಹಳ್ಳದ ಪಾತ್ರದಲ್ಲಿ ’ಹಕ್ಕಿ-ಪಿಕ್ಕ’ರು ಕಟ್ಟಿಕೊಂಡಿದ್ದ ಗುಡಿಸಲುಗಳೂ ತೇಲಿಹೋಗಿದ್ದವು. ಹಕ್ಕಿ-ಪಿಕ್ಕರು ಒಂದೇ ಊರಿನಲ್ಲಿ ನೆಲೆಯೂರುವ ಜಾಯಮಾನದವರಲ್ಲದ ಕಾರಣ ಅವರಿಗೆ ಕೆರೆ ದಂಡೆಯ ಖಾಲಿ ಜಾಗವೇ ಗುಡಿಸಲು ಕಟ್ಟಿಕೊಳ್ಳಲು ಪ್ರಶಸ್ತವಾಗಿತ್ತು. ಗುಡಿಸಲು ತೇಲಿಹೋದ ನಂತರ ’ಹಕ್ಕಿ-ಪಿಕ್ಕ’ರು ಮಲ್ಲರಳ್ಳಿಯಿಂದ ಕಾಣೆಯಾದರು. ಹಳ್ಳಿಯ ಕೆಲವರು ಹಕ್ಕಿ-ಪಿಕ್ಕರು ಬೇರೆ ಊರಿಗೆ ಹೋದರೆಂದೂ , ಇನ್ನೂ ಕೆಲವರು ಹಳ್ಳದ ನೀರಿನ ಜೊತೆಗೆ ಕೊಚ್ಚಿ ಹೋದರೆಂದೂ ತಮ್ಮಷ್ಟಕ್ಕೆ ತಾವೆ ತರಹೇವಾರಿ ಮಾತನಾಡಿಕೊಂಡರು.ಹಳ್ಳದಲ್ಲಿ ಹರಿದು ಹೋಗುತ್ತಿದ್ದ ಕೆರೆಯ ನೀರು ಇನ್ನೊಂದು ರಾದ್ದಾಂತವನ್ನೇ ಸೃಜಿಸಿತು. ಮಲ್ಲರಳ್ಳಿಯ ಕೆರೆಯ ನೀರು ತುಂಬಿ ಹಳ್ಳದಲ್ಲಿ ಹರಿಯಿತೆಂದರೆ ಆ ನೀರು ಅದೇ ಹಳ್ಳದಲ್ಲಿ ಮುಂದುವರೆದು  ಕಟ್ಟೆಪುರದ ಕೆರೆಯನ್ನು ಸೇರಬೇಕಿತ್ತು. ರಾಜರುಗಳ ಕಾಲದಲ್ಲಿ ಹಳ್ಳವು ಹಾಗೇ ಹರಿಯುತ್ತಿತ್ತೆಂದೂ, ಆ ಹಳ್ಳದಲ್ಲಿ ದೈವಾಂಶ ಸಂಭೂತವಾದ ಮೀನೊಂದು ಇತ್ತೆಂದೂ ಹಳ್ಳಿಗರೆಲ್ಲಾ ಮಾತನಾಡಿಕೊಳ್ಳುತ್ತಿದ್ದರು. ಕಟ್ಟೆಪುರದ ಕೆರೆಗೆ  ರಭಸದಿಂದ ಹರಿದು ಹೋಗಬೇಕಿದ್ದ ಹಳ್ಳದ ನೀರು ಹಿಮ್ಮುಖವಾಗಿ ಹರಿದು ಬಂದು ಮಲ್ಲರಳ್ಳಿಯ ಕೆಲವು ಪ್ರಮುಖ ವ್ಯಕ್ತಿಗಳ ಮನೆಯೊಳಗೆ ಪ್ರವಾಹದಂತೆ ನುಗ್ಗಿದಾಗಲೇ ಹಳ್ಳಿಗರಿಗೆ ’ಸಮಸ್ಯೆ’ಯ ಗಂಭೀರತೆ ಅರಿವಾದುದು. ಮಲ್ಲರಳ್ಳಿಯಿಂದ ಕಟ್ಟೆಪುರಕ್ಕೆ ಬೆಸೆಯುವ  ೧೨ ಮೈಲುಗಳ ರಸ್ತೆಯೊಂದಿತ್ತು. ಮಲ್ಲರಳ್ಳಿಯ ಹೊರವಲಯದಲ್ಲಿ ಅದೇ ರಸ್ತೆಯ ಕೆಳಗೆ ತೂಬೊಂದನ್ನು ಇರಿಸಿ ಹಳ್ಳದ ನೀರು ಹರಿದುಹೋಗುವಂತೆ ಪುಟ್ಟ ಸೇತುವೆಯೊಂದನ್ನು ಹಿಂದೆಂದೊ ಪಾಳೆಗಾರರ ಕಾಲದಲ್ಲಿ ನಿರ್ಮಿಸಿದ್ದರಂತೆ. ದೀರ್ಘಕಾಲದ ಅನಾವೃಷ್ಟಿಯ ಪರಿಣಾಮದಿಂದಾಗಿ ಆ ತೂಬು ಮಣ್ಣಿನಲ್ಲಿ ಮುಚ್ಚಿಹೋಗಿ ರಸ್ತೆಗೆ ಸಮವಾಗಿ ಎದ್ದುನಿಂತು ಅಲ್ಲೊಂದು ನೀರಿನ ಹರವು ಇದ್ದ ಸೇತುವೆ ಇತ್ತೆಂಬುದು ತಿಳಿಯಲಾಗದಷ್ಟು ಅಧ್ವಾನವೆದ್ದುಹೋಗಿತ್ತು. ಇಂತಹ ಸಂದರ್ಭದಲ್ಲೇ ಮರಿಯಪ್ಪ ತನ್ನ ಬುದ್ದಿವಂತಿಕೆಯನ್ನು ಮೆರೆದಿದ್ದು. ಹಳ್ಳಿಗರನ್ನೆಲ್ಲಾ ಒಟ್ಟಾಗಿ ಸೇರಿಸಿ ಪಂಚಾಯ್ತಿ ನೆಡೆಸಿ ತೂಬು ಸರಿಪಡಿಸಿ ಹಳ್ಳದ ನೀರು ಸರಾಗವಾಗಿ ಹರಿಯುವಂತೆ ಸೇತುವೆಯೊಂದನ್ನು ನಿರ್ಮಿಸುವ ಯೋಜನೆಯನ್ನು ಮರಿಯಪ್ಪನೇ ಪ್ರಚಾರ ಮಾಡಿದನು. ಹಳ್ಳಿಗರಿಗೆ ಮರಿಯಪ್ಪನ ಯೋಜನೆ ಸಮಂಜಸವೆನಿಸಿದರೂ ಇಂತಹ ಯೋಜನೆಗಳನ್ನು ಸರ್ಕಾರವೆ ಮಾಡಬೇಕೆಂದು ಕೆಲವು ಬುದ್ದಿವಂತರೆನಿಕೊಂಡಿದ್ದವರು ಆಕ್ಷೇಪಿಸಿದರು. ಮರಿಯಪ್ಪ ಅವರ ಆಕ್ಷೇಪಕ್ಕೆ ಸಕಾರಣವನ್ನೇ ನೀಡಿದನು. ಸರ್ಕಾರವನ್ನು ನಂಬಿ ಕುಳಿತರೆ ತಕ್ಷಣಕ್ಕೆ ಕೆಲಸವಾಗುವುದಿಲ್ಲವೆಂದು ವಿವರಿಸಿದನು.  ನೀರಾವರಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸರ್ವೇ ನೆಡೆಸಿ ಮುಖ್ಯ ಇಂಜಿನಿಯರ್ರಿಗೆ ವರದಿ ನೀಡಿದ ನಂತರ ,  ಮುಖ್ಯ ಇಂಜಿನಿಯರರು ಆ ವರದಿಯನ್ನು ಸರಕಾರಕ್ಕೆ ಸಲ್ಲಿಸಿ ಅಲ್ಲಿಂದ ಒಪ್ಪಿಗೆ ಪಡೆದು ಹಣವನ್ನು ಬಿಡುಗಡೆ ಮಾಡಿಸಿಕೊಂಡ ನಂತರವಷ್ಟೇ ಕೆಲಸ ಪ್ರಾರಂಭವಾಗಬಹುದೆಂದೂ, ಅಷ್ಟು ಕಾಲವಾಗುವುದರೊಳಗೆ ಇಡೀ ಮಲ್ಲರಹಳ್ಳಿಯೇ ಪ್ರವಾಹದಲ್ಲಿ ತೇಲಿಹೋಗಬಹುದೆಂಬ ಭೀತಿಯನ್ನೂ ಹುಟ್ಟಿಸಿದನು.  ಹೀಗೆ ಹುಟ್ಟಿದ ಭಯವೇ ಮಲ್ಲರಹಳ್ಳಿಯ ಎಲ್ಲಾ ಸೋಮಾರಿಗಳನ್ನೂ, ರೈತರನ್ನೂ, ಹೆಂಗಸರನ್ನೂ ಮತ್ತು ಹಾರುವರನ್ನೂ ಒಟ್ಟಾಗುವಂತೆ ಮಾಡಿದ್ದು. ಕರಸೇವೆಗೆ ಸಿದ್ದರಾದ ಹಳ್ಳಿಯ ಜನಕ್ಕೆ ಕೆಲಸ ಪ್ರಾರಂಭಿಸುವ ಮುನ್ನ ದೇವರ ಪೂಜೆಯಾಗಬೇಕಾದ್ದು ಅನಿವಾರ್ಯವಾಗಿತ್ತು. ’ಹಾಳೂರಿಗೆ ಉಳಿದವನೆ ಗೌಡ’ ಎಂಬಂತೆ ಮುಚ್ಚಿಹೋಗಿದ್ದ ಹಳೆಯ ಸೇತುವೆಯಿಂದ ಹತ್ತಡಿ ದೂರದಲ್ಲಿ ರಸ್ತೆಯ ಪಕ್ಕದಲ್ಲೇ ಪುಟ್ಟದಾದ ಹಾಳು ಗುಡಿಯೊಂದು ಹಳ್ಳಿಗರ ಕಣ್ಣಿಗೆ ಬಿದ್ದಿತು.
ಗುಡಿಯ ಮುಂದೆ ನೆರೆದ ಜನತೆ ಕುರುಬ ಜನಾಂಗದವನಾಗಿದ್ದ ಮರಿಯಪ್ಪನ ಮಗನನ್ನೇ ಪೂಜೆ ಮಾಡೆಂದು ಗುಡಿಯ ಒಳಗೆ ದೂಡಿದರು. ಆತ ಪರಿ-ಪರಿಯಾಗಿ ಒಲ್ಲೆನೆಂದರೂ ಅದನ್ನು ಲೆಕ್ಕಿಸದ ಹಳ್ಳಿಗರು ಅವನೇ ಪೂಜೆ ಮಾಡಬೇಕೆಂದು ಪಟ್ಟುಹಿಡಿದರು. ಒಳನುಗ್ಗಿದ್ದ ಮರಿಯಪ್ಪನ ಮಗನಿಗೆ ವರುಷಗಳಿಂದ ಸುಖವಾಗಿ ಜೀವಿಸುತ್ತಿದ್ದ ಜೇಡಗಳು, ಹಲ್ಲಿಗಳು, ಕಪ್ಪೆಗಳು ಇತ್ಯಾದಿಗಳನ್ನು ಹೊರಗೋಡಿಸಲು ಸಾಕು ಸಾಕಾಯಿತು. ಇದ್ದುದರಲ್ಲಿ ಸ್ವಚ್ಚಗೊಂಡ ಗುಡಿಯಲ್ಲಿ ಪೂಜೆ ಆರಂಭವಾಯಿತು. ಅದ್ಯಾರೋ ಒಬ್ಬರು ಬಿಂದಿಗೆಯಲ್ಲಿ ನೀರು ತಂದುಕೊಟ್ಟರು ಮತ್ತು ಆ ನೀರನ್ನು ಅವರ ಮುತ್ತಜ್ಜ ಕಾಶಿಯಿಂದ ತಂದಿದ್ದ ಗಂಗಾಜಲವೆಂದೇ ಸಾರಿದರು. ಗಂಗಾಭಿಷೇಕದ ನಂತರ ಮತ್ತೊಬ್ಬರು ತಂದಿದ್ದ ಊದುಬತ್ತಿ ಬೆಳಗಿ ಬಾಳೆಹಣ್ಣನ್ನೇ ಎಡೆಯಿಟ್ಟು ಕರ್ಪೂರ ಹಚ್ಚಲಾಯಿತು. ಕೆಲವರು ’ಮರಿ’ಯೊಂದನ್ನು ಕಡಿಯಲೇಬೇಕೆಂದು ಆಗ್ರಹಿಸಿದರೂ, ಮುಖ್ಯಸ್ಥರ ತೀರ್ಮಾನದಂತೆ ಬಾಳೆಹಣ್ಣಿನ ಎಡೆಯಲ್ಲೇ ಪೂಜೆ ನೆರವೇರಿತು. ಹಳ್ಳಿಗರು ತಂದಿದ್ದ ಗುದ್ದಲಿ, ಪಿಕಾಸಿ, ಹಾರೆ, ಮಚ್ಚು, ಬಾಣಲಿಗಳಿಗೂ ಪೂಜೆಯು ಸಂದಾಯವಾಯಿತು.

ಕೂತೂಹಲ ತಡೆಯಲಾರದೆ ಹಳ್ಳಿಗರಲ್ಲಿ ಒಬ್ಬನಾಗಿದ್ದ ಪುಟ್ಸಾಮಿ ಕೇಳಿಯೇ ಬಿಟ್ಟ " ಲೇ ಪೂಜಾರಿ, ಯಾವ್ ದೇವರ‍್ಲಾ ಒಳಗಿರೋದು " ಎಂದು.
ಮರಿಯಪ್ಪನ ಮಗನಿಗೆ ಅದೇನು ತಲೆಗೆ ತೋಚಿತೋ ಜೋರಾಗಿ ಕೂಗಿ ಹೇಳಿದ " ಕುಂಟಮ್ಮ ದ್ಯಾವ್ರು ಕಣ್ರಪಾ " ಎಂದು. ಪುಟ್ಸಾಮಿಗೆ ಅಶ್ಚರ್ಯವಾಯಿತೆಂದು ತೋರುತ್ತದೆ, ಆತನಿಗೆ ಕುಂಟಮ್ಮ ಎಂದರೆ ಯಾವ ದೇವರೆಂದು ಅರ್ಥವಾಗಲಿಲ್ಲ. ಪಕ್ಕದಲ್ಲಿದ್ದ ನಾಗಯ್ಯನನ್ನು ತಿವಿದು  " ಲೇ ನಾಗ, ಕುಂಟಮ್ಮ ಅಂದ್ರೆ ಯಾವ ದೇವರುಲಾ, ನಾನ್ ಕೇಳೇ ಇಲ್ಲಾ ಕಣಾಪಾ....ಈ ಪೂಜಾರಿ ಏನೋ ಸುಳ್ಳು ಏಳ್ತಾವ್ನೆ ಅನ್ಸುತ್ತೆ " ಎಂದು ಹೇಳಿದ. ನಾಗ ಪುಟ್ಸಾಮಿಯ ತಲೆಯ ಮೇಲೆ ಬಲವಾಗಿ ಕುಟ್ಟಿದ " ತಿಕಾ ಮುಚ್ಕಂಡು ಇರಕ್ಕೆನ್ಲಾ ನಿನಗೆ ! ಕುಂಟಮ್ಮ ಅಂದ್ರೆ ಕುಂಟಮ್ಮ ಅಷ್ಟೆಯಾ, ಅದ್ನೆಲ್ಲಾ ಬಿಡ್ಸ್ ಏಳಾಕಾಯ್ತದೆನ್ಲಾ, ಸುಮ್ಕೆ ಕೆಲ್ಸ ನೋಡವಾ ಬಾ " ಎಂದು ಉಗಿದ. ಅಷ್ಟು ವೇಳೆಗಾಗಲೆ ಪೂಜೆಯ ಕೆಲಸಗಳು ಮುಗಿದು ಎಲ್ಲರೂ ಹಳೆಯ ಸೇತುವೆಯ ಬಳಿಯಲ್ಲಿ ನೆರೆದಿದ್ದರು. ಈಗ ಕಟ್ಟಲಾಗುವ ಸೇತುವೆಗೆ "ಕುಂಟಮ್ಮನ ಸೇತುವೆ" ಎಂದು ಮರಿಯಪ್ಪ ನಾಮಕರಣ ಮಾಡಿದನು. ಕೆಲಸ ಪ್ರಾರಂಭವಾಯಿತು.

ಮರಿಯಪ್ಪನ ಮಗ ಗುಡಿಯೊಳಗಿದ್ದ ’ಆ’ ದೇವರಿಗೆ ’ಕುಂಟಮ್ಮ’ ಎಂದು ಏಕೆ ಹೆಸರಿಟ್ಟ ಎನ್ನುವುದು ಇನ್ನೂ ಸ್ವಾರಸ್ಯಕರವಾದ ವಿಷಯ.

( ಕತೆ... ಇನ್ನೂ ಇದೆ.. )

----------------------------------------------------------------------------------

ಕೊನೆಕಿಡಿ.

ತಿಂಮನಿಗೆ ಸಮಾಜ ಸೇವೆ ಮಾಡುವ ಮನಸಾಯಿತು. ದೇವ ಮಂದಿರವೊಂದನ್ನು ಕಟ್ಟಿಸುವ ಆಸೆ ವ್ಯಕ್ತಪಡಿಸಿದ. 
ಅಲ್ಲಿಗೆ ಕೇವಲ ಹಿಂದೂಗಳು ಮಾತ್ರ ಬರುತ್ತಾರೆಂದು ಬೇಡವೆನಿಸಿ ಸುಮ್ಮನಾದ.
ಮಸೀದಿಯೊಂದನ್ನು ಕಟ್ಟಿಸಲು ಹವಣಿಸಿದ. ಅಲ್ಲಿಗೆ ಬರೇ ಮುಸಲಮಾನರು ಬರುತ್ತಾರೆಂದು ತೆಪ್ಪಗಾದ.
ಇಗರ್ಜಿ(ಚರ್ಚು) ಯೊಂದನ್ನು ಕಟ್ಟಲು ತೀರ್ಮಾನಿಸಿದ. ಅಲ್ಲಿಗೆ ಕೇವಲ ಕ್ರಿಸ್ತರು ಬರುತ್ತಾರೆಂದು ಅದನ್ನೂ ಬೇಡವೆಂದು ತ್ಯಜಿಸಿದ.
ತಿಂಮನಿಗೆ ಪ್ರಚಂಡ ಉಪಾಯವೊಂದು ಹೊಳೆಯಿತು. ಎಲ್ಲರೂ ಬರುವಂತೆ ಮಾಡಬಹುದಾದುದನ್ನೇ ಕಟ್ಟಿಸಬೇಕೆಂದು ನಿರ್ಣಯಿಸಿದ.
ಸಾಲಾಗಿ ಆರು ಕಕ್ಕಸುಗಳನ್ನು ಕಟ್ಟಿಸಿದ !.

(ಈ ಕಿಡಿ ನನ್ನದಲ್ಲ. ಬೀchi ಯವರ ’ತಿಂಮನತಲೆ’ಯಿಂದ ಹೆಕ್ಕಿದ್ದು. ನಕ್ಕುಬಿಡಿ ) 

Sep 22, 2010

ಭಾರತ ಬಲಿಪಶುವೇ ?

ಹತ್ತೊಂಬತ್ತು ನೂರು ಅರವತ್ತಾರನೆಯ ಇಸವಿಯಲ್ಲಿ ವಿನಾಯಕ ದಾಮೋದರ ಸಾವರಕರರು (ವೀರ ಸಾವರಕರ್) ನಿಧನರಾದಾಗ ಭಾರತದ ಸಂಸತ್ತಿನಲ್ಲಿ ಸಾವರಕರರಿಗೆ ಶ್ರಂದ್ಧಾಂಜಲಿ ಸಲ್ಲಿಸುವ ವಿಷಯವೊಂದು ಪ್ರಸ್ತಾಪವಾಯಿತು. ಅಂದಿನ ಸಭಾಧ್ಯಕ್ಷರು (ನೆಹರು ಕೃಪಾಪೋಷಿತ) ಆ ಪ್ರಸ್ತಾಪವನ್ನು ತಿರಸ್ಕರಿಸಿದರು, ಕಾರಣ ಸಾವರ್ಕರರು ಸಂಸತ್ತಿನ ಸದಸ್ಯರಲ್ಲ ಎನ್ನುವುದು. ಮುಂದಿನ ದಿನಗಳಲ್ಲಿ ಅದೇ ಸಂಸತ್ತು ನಮ್ಮ ದೇಶದವರೇ ಅಲ್ಲದ "ಸ್ಟಾಲಿನ್" ಗೆ ಗೌರವಾರ್ಪಣೆ ಸಲ್ಲಿಸುತ್ತದೆ. ಇದಕ್ಕೆ ಕಾರಣ ಅಂದು ನೆಹರು ಅಪ್ಪಿಕೊಂಡಿದ್ದ ಸೋವಿಯತ್ ಒಕ್ಕೂಟದ ಆಕರ್ಷಣೆಗಳು ಮತ್ತು ತಾನಲ್ಲದೆ ಮತ್ತಾರೂ ರಾಜಕೀಯವಾಗಿ ಬೆಳೆಯಬಾರದೆಂದು ನೆಡೆಸಿದ್ದ ಪಿತೂರಿ. ವಿದೇಶಿ ವ್ಯಾಮೋಹಗಳಲ್ಲೇ ತೇಲಾಡಿದ ವ್ಯಕ್ತಿಯೊಬ್ಬರನ್ನು ಭಾರತದ ಪ್ರಧಾನಿಯಾಗಿ ಪಡೆದದ್ದು ಭಾರತದ ಹಣೆಬರಹವೆ ? ಮುಂದೆ ನೆಹರೂ ಮಾಡಿದ ಎಡವಟ್ಟುಗಳ ಫಲವನ್ನು ನಾವಿಂದಿಗೂ ಉಣ್ಣುತ್ತಲೇ ಇದ್ದೇವೆ. ನಿಜ, ಏಕವ್ಯಕ್ತಿಯನ್ನು ದೂರುವುದರಿಂದ ದೇಶಕ್ಕೆ ಯಾವ ಪ್ರಯೋಜನವೂ ಇಲ್ಲ, ಆದರೆ ಅಂದಿನ ವಿದೇಶಾಂಗ ನೀತಿಗಳು  ಸ್ವದೇಶಿ ಆಚರಣೆಗೆ ಎಂತಹ ದೊಡ್ಡ ಪೆಟ್ಟುಕೊಟ್ಟಿತು ಎನ್ನುವುದನ್ನು ಪ್ರಜ್ಞಾವಂತರಾರೂ ಮರೆಯಲು ಸಾಧ್ಯವಿಲ್ಲ. ಅಂತೂ ಯಾವುದೋ ಒಂದು ದಾರಿಯ ಮೂಲಕ ವಿದೇಶಿಯರು ಭಾರತೀಯರ ಮೇಲೆ ತಮ್ಮ ಪ್ರಭುತ್ವ ಸ್ಥಾಪಿಸಿಯೇ ಇಲ್ಲಿಂದ ಹೊರಟರು. ಕಾಂಗ್ರೇಸು "ಕ್ವಿಟ್ ಇಂಡಿಯಾ" ಎಂದರೆ ಸಾವರ್ಕರರು "ಕ್ವಿಟ್ ಇಂಡಿಯಾ ವಿತ್ ಬ್ಯಾಗ್ ಅಂಡ್ ಬ್ಯಾಗೇಜ್" ಎಂದಿದ್ದರು !. ಆದರೆ ಆಂಗ್ಲರು ತಮ್ಮ ಕುರುಹುಗಳನ್ನು ಭಾರತದಲ್ಲಿ ಬಿಟ್ಟು ಹೋಗಲು ಸಹಾಯ ಮಾಡಿದ್ದು ಸ್ವತಂತ್ರ ಭಾರತದ ಪ್ರಥಮ ಪ್ರಧಾನಿಯಾದವರೆ !. ಇಲ್ಲಿಂದ ಮುಂದೆ ಗ್ಲಾಮರ್ ಪಡೆದುಕೊಂಡ ವಿದೇಶಿ ವ್ಯಾಮೋಹಗಳು ಇಂದಿಗೆ comfortabale ಎನ್ನುವಷ್ಟರ ಮಟ್ಟಿಗೆ ಬೆಳೆದು ನಿಂತಿದೆ. " ನನಗೆ ಈ ಡ್ರೆಸ್ comfortable ಆಗಿದೆ, ಅದಕ್ಕೆ ನಾನು ಧರಿಸುತ್ತೇನೆ, ಯಾರು ತಯಾರಿಸಿದ್ದರೆ ನನಗೇನು ? " ಎಂದು ಸವಾಲು ಹಾಕುವ ಯುವಸಮುದಾಯಕ್ಕೆ ತಾವು ಪರೋಕ್ಷವಾಗಿ ವಿದೇಶಿ ಕಂಪನಿಗಳನ್ನು, ರಾಷ್ಟ್ರಗಳನ್ನು ಬೆಳೆಸುತ್ತಾ ಭಾರತವನ್ನು ಅಧೋಗತಿಗೆ ತಳ್ಳುತ್ತಿದ್ದೇವೆಂಬ ಕಲ್ಪನೆ ಇದ್ದೀತೆ?. ಮುಂದೊಂದು ದಿನ ಏನಕೇನ ಪ್ರಕಾರೇಣ ವಿದೇಶಿಯರ ಬೂಟು ನೆಕ್ಕುವ ಪರಿಸ್ಥಿತಿ ಬಂದಾಗಲೆ ಅಂತಹ ಸಮುದಾಯಕ್ಕೆ ಸ್ವತಂತ್ರದ ಮಹತ್ವ ಅರಿವಾಗಬಹುದು. ಜಗತ್ತಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಬೆಳೆದಂತೆ ಭಾರತವೂ ಅದಕ್ಕೆ ಸಮಾನಾಂತರವಾಗಿ ಬೆಳೆಯಬೇಕೆಂಬುದು ಸಮಂಜಸವೇ ಆದರೂ ಅಂತಹ ಪೂರಕ ಬೆಳವಣಿಗೆಯಲ್ಲಿ ಭಾರತೀಯತೆ ಇದ್ದಷ್ಟೂ ನಮ್ಮ ನೆಲ ಗಟ್ಟಿಯಾಗುತ್ತಾ ಹೋಗುತ್ತದೆ. ದೇಶಕ್ಕೆ contribute ಮಾಡುವ ಮನೋಭಾವ ವಿದೇಶಿಗಳಲ್ಲಿರುವುದೇ ಆಯಾ ದೇಶಗಳು ಹೆಚ್ಚಿನ ಪ್ರಗತಿ ಸಾಧಿಸಲು ಕಾರಣವಾಗಿದೆಯೆನ್ನಬಹುದು. ಹಾಗಾದರೆ ಭಾರತೀಯರು ದೇಶಕ್ಕೆ ಕೊಡುಗೆ ನೀಡುವುದಿಲ್ಲವೆ ? ,ಇಲ್ಲಿ ಕೊಡುಗೆ ನೀಡುವ ಪ್ರಶ್ನೆಗಿಂತಲೂ ಅಂತಹ ಕೊಡುಗೆ ಭಾರತದ ಪ್ರಭುತ್ವದಲ್ಲಿ ಸದ್ವಿನಿಯೋಗವಾಗುತ್ತದೆ ಎಂಬುದರ ಬಗ್ಗೆ ಯಾವ ಪ್ರಜ್ಞಾವಂತ ನಾಗರೀಕನಿಗೂ ನಂಬಿಕೆ ಉಳಿದಿಲ್ಲ. ಅಂತಹ ನಂಬಿಕೆಯನ್ನು ಭಾರತವನ್ನಾಳಿದ-ಆಳುತ್ತಿರುವ ಪ್ರಭುಗಳು ಉಳಿಸಿಕೊಂಡಿಲ್ಲವೆಂಬುದು ಸರ್ವವಿದಿತ. ಭಾರತೀಯರ ಇಂತಹ ದೌರ್ಬಲ್ಯಗಳು ವಿದೇಶಗಳಿಗೆ ಮಾರುಕಟ್ಟೆಯ ವಸ್ತುವಾಗಿ ಬಿಡುತ್ತದೆ. ನಮ್ಮಲ್ಲೇ ತಯಾರಾಗುತ್ತಿದ್ದ ಹತ್ತಿಯ ಬಟ್ಟೆಗಳು ತಿರಸ್ಕರಿಸಲ್ಪಡುತ್ತವೆ ಮತ್ತು ವಿದೇಶಿ ಕಂಪೆನಿಯ 100% cotton ಎನ್ನುವ ಹಣೆಪಟ್ಟಿ ಇರುವ ಬಟ್ಟೆಗಳೇ ನಮಗೆ ಹೆಚ್ಚು ಆಕರ್ಷಣಿಯವಾಗುತ್ತದೆ.

ನಾಟಿ ತರಕಾರಿಗಳು, ಬೇಳೆ-ಕಾಳುಗಳನ್ನು ಬೆಳೆದು ತಿನ್ನುತ್ತಿದ್ದ ಭಾರತೀಯರಿಗೆ ದಪ್ಪನೆಯ ಟೋಮ್ಯಾಟೋ ತೋರಿಸಿ ಹೈಬ್ರಿಡ್ ತಳಿಯ ರುಚಿ ಹತ್ತಿಸಲಾಗುತ್ತದೆ. ಅಂತಹ ತಳಿಯನ್ನು ಬೆಳೆಯಲು ಬೀಜಗಳನ್ನು, ಸಸಿಗಳನ್ನು ಪೂರೈಸಲಾಗುತ್ತದೆ. ಅವುಗಳ ಬೆಳವಣಿಗೆಗೆ ಗೊಬ್ಬರ-ರಾಸಾಯನಿಕಗಳು ಬೇಕಾಗುವುದರಿಂದ ಅವುಗಳನ್ನೂ ವ್ಯವಸ್ಥಿತವಾಗಿ ಪೂರೈಸಲಾಗುತ್ತದೆ. ಹೀಗೆ ಬೆಳೆಯಲ್ಪಟ್ಟ ತರಕಾರಿ, ಕಾಳುಗಳಲ್ಲಿ ನಾಟಿ ಆಹಾರದಲ್ಲಿರುತ್ತಿದ್ದ ಪೋಷಕಾಂಶಗಳು ಇಲ್ಲವಾಗಿ ಕೇವಲ ಆಕರ್ಷಣೆಯ ವಸ್ತುವಾಗಿ ಮಾತ್ರ ಉಳಿಯುತ್ತದೆ. ಇಂತಹ ಆಕರ್ಷಣೆಗೆ ಭಾರತೀಯರು ಬಲಿಪಶುಗಳಾಗುತ್ತಾರೆ. ಇವಿಷ್ಟನ್ನೂ ಒಂದು ವಿದೇಶಿ ಕಂಪೆನಿ ವ್ಯವಸ್ಥಿತವಾಗಿ ಮಾಡುತ್ತದೆ. ಏಕೆಂದರೆ ವಿದೇಶಿಯರಿಗೆ ಮೇಯಲು ಭಾರತದಂತಹ ಹುಲ್ಲುಗಾವಲು ಇನ್ನೆಲ್ಲಿ ಸಿಕ್ಕೀತು ?

ಇಂತಹ ಅಪೌಷ್ಟಿಕ ಮತ್ತು chemically treated ಆಹಾರವನ್ನು ತಿನ್ನುವ ಭಾರತೀಯರಿಗೆ ಸಹಜವಾಗಿಯೇ ರೋಗಗಳು ಅಟಕಾಯಿಸಿಕೊಳ್ಳುತ್ತವೆ. (ಥಿಂಕಿಸಿ : ’ಅಸಿಡಿಟಿ’ ಎನ್ನುವ ಮಾರಿ ಈಗ್ಗೆ ಹತ್ತು ವರ್ಷಗಳ ಹಿಂದೆ ಭಾರತದಲ್ಲಿ ಎಷ್ಟೋ ಮಂದಿಗೆ ಗೊತ್ತೇ ಇರಲಿಲ್ಲ, ಈಗ ಅಸಿಡಿಟಿ ಇಲ್ಲದವರೇ ಇಲ್ಲ !) ಇಂತಹ ರೋಗಗಳಿಗೆಂದೇ ಮಾತ್ರೆಗಳು ಔಷಧಿಗಳು ತಯಾರಾಗುತ್ತವೆ. ಇದರ ಹಿಂದೆ ವಿದೇಶಿ 'pharma company' ಗಳ ದೊಡ್ಡ ಮಾಫಿಯಾವೆ ಇರುತ್ತದೆ. ಇದೊಂದು ರೀತಿ ಸರಪಳಿಯಂತೆ, ಒಂದರ ನಂತರ ಇನ್ನೊಂದು ಅನಿವಾರ್ಯವಾಗಿ ಬಿಡುತ್ತದೆ. ಭಾರತೀಯ ಸಾಯುತ್ತಾನೆ, ವಿದೇಶಗಳು ಉದ್ಧಾರವಾಗುತ್ತವೆ.

ಹೀಗೆ ಸಣ್ಣ-ಪುಟ್ಟ ವಿಷಯಗಳಲ್ಲೆಲ್ಲಾ ತಲೆ ಹಾಕುತ್ತಿರುವ ವಿದೇಶಿಗಳು ಭಾರತವನ್ನು ಮತ್ತೆ ತಮ್ಮ ವಸಾಹತನ್ನಾಗಿ ಮಾಡಿಕೊಳ್ಳುತ್ತಿರುವರೆ ? ನಾವು ಮತ್ತೆ ಅವರಿಗೆ ಅಡಿಯಾಳಾಗುವೆವೆ ? ಯೋಚಿಸಲೇಬೇಕಾಗುತ್ತದೆ. ಇನ್ನೊಂದು ಗಹನವಾದ ವಿಚಾರವನ್ನು ಗಮನಿಸೋಣ...
HIV ಯಿಂದ AIDS ಎಂಬ ಕಾಯಿಲೆ ಬರುತ್ತದೆ ಅನ್ನುವುದನ್ನು ಎಲ್ಲಾ ಮುಂದುವರಿಯುತ್ತಿರುವ ರಾಷ್ಟ್ರಗಳು ಒಪ್ಪಿಕೊಂಡು ಅದರ ವಿರುದ್ದದ ಹೋರಾಟಕ್ಕೆ ಯಾವ ಶಸ್ತ್ರಗಳು ಬೇಕೋ ಅದನ್ನೆಲ್ಲಾ ಸಿದ್ದವಾಗಿಟ್ಟುಕೊಂಡಿವೆ. AIDS ಎನ್ನುವುದು ಹೆಚ್ಚಾಗಿ ಕಂಡುಬರುತ್ತಿರುವುದು ಆಫ್ರಿಕಾದ ಹಿಂದುಳಿದ ರಾಷ್ಟ್ರಗಳಲ್ಲಿ ಮತ್ತು ಭಾರತದಂತಹ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ . ಅಮೇರಿಕ ಮತ್ತು ಯುರೋಪುಗಳಲ್ಲಿ AIDS ನ ಕಾಟ ಅಷ್ಟಾಗಿ ಇಲ್ಲವೆನ್ನಬಹುದು. ಹಾಗಾದರೆ HIV ಎನ್ನುವ ವೈರಾಣು AIDS ಎನ್ನುವುದನ್ನು ಉಂಟುಮಾಡುತ್ತದೆಯೆ ?  ಇಲ್ಲವೆನ್ನುತ್ತಾರೆ ಪ್ರಖ್ಯಾತ ನೊಬೆಲ್ ಪ್ರಶಸ್ತಿ ವಿಜೇತ ವಿಜ್ಞಾನಿಗಳು. ( ಗೂಗ್ಲಿಸಿ : Is there any proof that  HIV leads to AIDS ? ). ಯಾವ ವಿಜ್ಞಾನಿಯೂ ವೈರಾಣುವಿನಿಂದ AIDS ಹರಡುತ್ತದೆ ಎಂಬುದಕ್ಕೆ ಸರಿಯಾದ refference ಕೊಡುವುದಿಲ್ಲ. AIDS ನ ಕಲ್ಪನೆಯ ಹಿಂದೆ pharma industry ಗಳ ದೊಡ್ಡ ಮಾಫಿಯಾವೆ ಇದೆ ಎಂದು ಪ್ರತಿಭಟಿಸಿದ ಅಮೇರಿಕದ ನೊಬೆಲ್ ಪ್ರಶಸ್ತಿ ವಿಜೇತ ವಿಜ್ಞಾನಿಯೊಬ್ಬರನ್ನು ಸದ್ದಿಲ್ಲದೆ ಭೂಗತನನ್ನಾಗಿ ಮಾಡಲಾಗುತ್ತದೆ. AIDS ಎನ್ನುವುದು ಮಹಾಮಾರಿ ಎಂಬಂತೆ ಚಿತ್ರಿಸಿ ತನ್ನ ಅಂಕೆಯಲ್ಲಿರುವ ದೇಶಗಳ ಮೇಲೆ ಅಮೇರಿಕ ಎಂಬ ದೊಡ್ಡಣ್ಣ pharma ಅಧಿಪತ್ಯವನ್ನು ಸ್ಥಾಪಿಸುತ್ತದೆ. ದಿಗಿಲು ಹುಟ್ಟಿಸುವ ವಿಚಾರವೆಂದರೆ, ಅಮೇರಿಕದ ಒಟ್ಟು ಆದಾಯದಲ್ಲಿ ಅರ್ಧ ಪಾಲು pharma indusrry ಗಳದ್ದೇ ಆಗಿದೆ ಎನ್ನುವುದು !.  ವಿಜ್ಞಾನಿಗಳೇ ಹೇಳುವಂತೆ ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ AIDS ( ’ಸಿಂಡ್ರೋಮ್’ ಅನ್ನುವುದನ್ನು ವಿಜ್ಞಾನಿಗಳು ಇದುವರೆವಿಗೂ ಒಪ್ಪಿಲ್ಲ !)  ಎಂಬ ಕಾಯಿಲೆ ಬರುವ ಸಾಧ್ಯತೆ ಕೇಲವ ಶೇ ೨ ರಷ್ಟು ಮಾತ್ರ !.
ಹಾಗಾದರೆ ಇದು AIDS ( Aquired immune deficiency syndrome) ಅಲ್ಲವಾದರೆ ಮತ್ತೇನು ? ವಿಜ್ಞಾನಿಗಳಿಗೂ ಇದು ಪ್ರಶ್ನೆಯಾಗಿಯೇ ಇದೆ. ಇದನ್ನು failure of science ಎಂತಲೂ ಕೆಲವು ವಿಜ್ಞಾನಿಗಳು ಒಪ್ಪಿಕೊಳ್ಳುತ್ತಾರೆ.  ಇಂತಹ AIDS ಅನ್ನು ತಡೆಗಟ್ಟಲೆಂದೋ ಅಥವ ಅರಿವು ಮೂಡೀಸಲೆಂದೋ NACO ಮುಂತಾದ ಸಂಸ್ಥೆಗಳು ಕೋಟಿಗಟ್ಟಲೆ ಹಣ ಬಾಚುತ್ತವೆ. ಮೂರು ಜಿಲ್ಲೆಗಳ ಉಸ್ತುವಾರಿ ಹೊರುವ ಒಬ್ಬ ಮೇಲ್ವಿಚಾರಕನಿಗೆ NACO ೩೦ ರಿಂದ ೫೦ ಸಾವಿರದವರಗೆ ಸಂಬಳ ನೀಡುತ್ತದೆಯೆಂದರೆ ಅದಕ್ಕೆ ಬರುತ್ತಿರುವ funding ಎಷ್ಟಿರಬಹುದು ಮತ್ತು ಅದರ ವ್ಯಾಪ್ತಿ ಎಷ್ಟಿರಬಹುದೆಂದು ಅಂದಾಜಿಸಿಕೊಳ್ಳಬೇಕಾಗುತ್ತದೆ. ಒಬ್ಬ AIDS ತಗುಲಿದೆ ಎನ್ನಲಾಗುವ ರೋಗಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕೆಂದರೆ , ಆತನಿಗೆ ವಿದೇಶಗಳಿಂದಲೇ (U.S) ಔಷಧಿಗಳು ಪೂರೈಕೆಯಾಗಬೇಕು, ಮತ್ತು ಅಂತಹ ಔಷಧಿಗಳ ಬೆಲೆ ಸಾಮಾನ್ಯರಿಗೆ ಎಟುಕುವಂತಹುದಲ್ಲ. ಹೀಗೆ ತಮ್ಮ ಕರೆನ್ಸಿಗಳನ್ನು ಉತ್ತಮಪಡಿಸಿಕೊಳ್ಳುವ ಸಲುವಾಗಿ ಇತರೆ ರಾಷ್ಟ್ರಗಳನ್ನು ಸದಾ ಮರುಳು ಮಾಡುತ್ತಿರುವ ವಿದೇಶೀ ಕುಯುಕ್ತಿಗೆ ಭಾರತವೂ ಬಲಿಯಾಗಬೇಕೆ ?

ತಮ್ಮಲ್ಲಿರುವ ಹಳೆಯ ಶಸ್ತ್ರಾಸ್ತ್ರಗಳ ಹೊರದಬ್ಭುವಿಕೆಗೆ ವಿದೇಶಗಳು (ಪ್ರಮುಖವಾಗಿ U.S.) ಕಣ್ಣುಹಾಕುವುದು ಪಾಕಿಸ್ಥಾನ ಮತ್ತು ಭಾರತದಂತಹ ರಾಷ್ಟ್ರಗಳ ಮೇಲೆಯೆ. ಭಾರತವನ್ನು ಅದುಮಿಟ್ಟುಕೊಳ್ಳಲು ಪಾಕಿಸ್ಥಾನವನ್ನು ಮೆರೆಸುವ ವಿದೇಶಿ ಕೈಗಳು ಚೀನಾವನ್ನು ಹತ್ತಿಕ್ಕಲು ಭಾರತಕ್ಕೆ ಸಹಾಯ ಮಾಡುವ ಸೋಗು ಹಾಕುತ್ತವೆ. ಹಾಗೂ-ಹೀಗೂ ಅಭದ್ರತೆಯ ಭಯ ಹುಟ್ಟಿಸಿ  ತಮ್ಮಲ್ಲಿರುವ ಶಸ್ತ್ರಾಸ್ತ್ರಗಳನ್ನು ಮಾರುವ ಮೂಲಕ ಮತ್ತಷ್ಟು ಕರೆನ್ಸಿಗಳನ್ನು ತಮ್ಮ ಬೊಕ್ಕಸಕ್ಕೆ ತುಂಬಿಕೊಳ್ಳುತ್ತವೆ. ಇಲ್ಲೂ ಬಲಿಪಶುವಾಗುವುದು ಭಾರತದಂತಹ ರಾಷ್ಟ್ರಗಳೆ.

ನಗರೀಕರಣದ ಭರದಲ್ಲಿ ಅತಿಯಾದ ವಿದೇಶಿ ಸಂಸ್ಕೃತಿಗೆ ಮಾರುಹೋಗಿ ಅದನ್ನೇ ತತ್ವಾದರ್ಶವೆಂದು ನಂಬಿ ಬದುಕಲು ಹೊರಟಿರುವ  ಯುವಸಮುದಾಯಕ್ಕೆ  ಇತ್ತೀಚಿಗೆ ಎರಡು ತಿಂಗಳುಗಳಿಂದ ನಡೆಯುತ್ತಿರುವ ಕಾಶ್ಮೀರದ ಹಿಂಸೆ ಎಚ್ಚರಿಕೆಯ ಗಂಟೆಯಾಗಬೇಕಿದೆ. ಸಂಪೂರ್ಣ ಭಾರತೀಯರದ್ದೇ ನೆಲವಾಗಿದ್ದ ಕಾಶ್ಮೀರ ಇಂದು ವಿದೇಶೀ ಶಕ್ತಿಗಳ ಕೈವಾಡದಿಂದಾಗಿ ಭಾರತದ ಕೈತಪ್ಪಿ ಹೋಗುವ ಸ್ಥಿತಿ ಉದ್ಭವವಾಗುತ್ತಿದೆ. ಮುಂದೆ ಅದು ಜಮ್ಮು, ಡೆಹ್ರಾಡೂನ್, ದಿಲ್ಲಿಯವರೆಗೂ ವ್ಯಾಪಿಸಲಾರದು ಎನ್ನುವುದನ್ನು ಸುಖಾಸುಮ್ಮನೆ ತಳ್ಳಿಹಾಕಲಾಗುವುದಿಲ್ಲ.  ಇಷ್ಟಕ್ಕೂ ವಿದೇಶಿ ಆಚರಣೆಗಳಿಗೇ ಮಣೆಹಾಕಿ ಅವರಿಗೇ ಬಹುಪರಾಕ್ ಹೇಳಿ ಮುಂದೊಂದು ದಿನ ನಾವೆಲ್ಲಾ ಅಡಿಯಾಳುಗಳಾದರೆ, ವಿದೇಶಿಯರೇನೂ ನಮ್ಮನ್ನು ಸಿಂಹಾಸನದಲ್ಲಿ ಕುಳ್ಳಿರಿಸುತ್ತಾರೆಯೆ ? ಖಂಡಿತ ಇಲ್ಲ !. ಅವರ ಬೂಟು ಪಾಲೀಶಿಗೋ, ಮಲ ಹೊರುವುದಕ್ಕೋ, ಬಟ್ಟೆ ಒಗೆದುಕೊಡಲೋ ನಮ್ಮನ್ನು ಉಪಯೋಗಿಸಿಕೊಳ್ಳುವುದು ನಿಶ್ಚಿತ.  ಅಣುಬಾಂಬುಗಳನ್ನು ಹೊಂದಿರುವ ಭಾರತ ಎಂತಹ ವಿಪತ್ತನ್ನಾದರೂ ಎದುರಿಸತ್ತದೆ ಎಂದು ಧೈರ‍್ಯವಾಗಿ ಹೇಳಿಕೊಂಡರೂ , ನಮ್ಮ ಭೃಷ್ಟಚಾರದ ಪ್ರಭುತ್ವ ಅಂತಹ ವಿಪತ್ತನ್ನು ಎದುರಿಸುವ ಸಾಮರ್ಥ್ಯವನ್ನು ಹೊಂದಿದೆಯೇ ಎನ್ನುವುದನ್ನು ವಿಮರ್ಷಿಸಬೇಕಾಗಿದೆ. ಇತ್ತೀಚೆಗೆ ಅಂಡಮಾನಿನ ಸೆಲ್ಯುಲರ್ ಜೈಲಿನ ಹೊರಭಾಗದಲ್ಲಿ ಸಾವರ್ಕರ್ ನೆನಪಿಗೆ ಸ್ಥಾಪಿಸಲಾಗಿದ್ದ ಸ್ಮಾರಕವೊಂದನ್ನು ಕಿತ್ತೊಗೆಸಿದ ’ಮಣಿಶಂಕರ್ ಅಯ್ಯರ್’ ರಂತಹ ಎಡಬಿಡಂಗಿ ಜನನಾಯಕರಿರುವ ಭಾರತದಲ್ಲಿ ಭಾರತೀಯರು ಬಲಿಪಶುವಾಗದೇ ಮತ್ತೇನು ಆಗಲು ಸಾಧ್ಯ ?

ಭಾರತದಲ್ಲಿ ವಿದೇಶಿಗಳಿಗಿಂತಲೂ ಅತ್ಯಂತ ಬುದ್ಧಿವಂತ ವೈದ್ಯರುಗಳು, ಇಂಜಿನಿಯರುಗಳು, ಶಿಕ್ಷಕರು, ತತ್ವಜ್ಞಾನಿಗಳು, ಇದ್ದಾರೆನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ, ಇವರೆಲ್ಲರ ಶಕ್ತಿ ವ್ಯಯವಾಗುತ್ತಿರುವುದು ವಿದೇಶಿ ಕಂಪೆನಿಗಳಿಗಾಗಿ,  ವಿದೇಶಿಗಳಿಗಾಗಿ ಎಂಬ ಕಹಿಸತ್ಯವನ್ನು ನಾವು ಅರಗಿಸಿಕೊಳ್ಳಲೇಬೇಕಿದೆ. ಭೃಷ್ಟ ಭಾರತೀಯ ಪ್ರಭುತ್ವವು ಭಾರತೀಯ ವಿದ್ಯಾವಂತರನ್ನು ನಡೆಸಿಕೊಳ್ಳುವ ಪರಿಯೇ ಹಾಗಿದೆ. ಸರ್ಕಾರದ ಅಧೀನಕ್ಕೊಳಪಡುವ ಗ್ರಾಮಪಂಚಾಯ್ತಿಯ ಗ್ರಾಮಲೆಕ್ಕಿಗನಿಂದಲೇ ಲಂಚಾವತಾರದ ಪ್ರಹಸನ ಪ್ರಾರಂಭವಾಗುತ್ತದೆ ಮತ್ತು ಇದು ದಿಲ್ಲಿ ಗದ್ದುಗೆಯವರೆಗೂ ತಲುಪುತ್ತದೆ ಎಂದರೆ, ಭೃಷ್ಟಾಚಾರದ ಜಾಲ ಎಂತಹುದು ಎಂಬುದನ್ನು ಯೋಚಿಸಬೇಕಾಗುತ್ತದೆ. ೩೦೦ ವರ್ಷಗಳ ಹಿಂದೆ ’ಈಸ್ಟ್ ಇಂಡಿಯಾ ಕಂಪೆನಿ’ ಹೆಸರಿನಲ್ಲಿ ಭಾರತಕ್ಕೆ ಕಾಲಿಟ್ಟ ವಸಾಹತುಗಳು ಇಂದು ’ಬಹುರಾಷ್ಟ್ರೀಯ ಕಂಪೆನಿ’ ಎಂಬ ಹೆಸರಿನಲ್ಲಿ ಬಂದಿವೆ. ಇದರಿಂದ ಯಾರ‍್ಯಾರಿಗೆ ಎಷ್ಟು ಉಪಯೋಗವಾಗಿದೆಯೋ, ಅಂತೂ ಇದರ ಧನಾತ್ಮಕ ಮತ್ತು ಋಣಾತ್ಮಕ ಫಲಿತಾಂಶಗಳಿಗೆ ಅಂತಿಮವಾಗಿ ಭಾರತವೇ ಬಲಿಪಶುವಾಗಬೇಕಿದೆ. ಇದಕ್ಕೆಲ್ಲಾ ನಿಯಂತ್ರಣ ತರಲು ಸಾಧ್ಯವಿಲ್ಲವೆ ಎಂದು ಚಿಂತಿಸಿದರೆ, ಅದರ ಬೇರುಗಳು ನಮ್ಮ ದೇಶದ ವ್ಯವಸ್ಥೆಯನ್ನೇ ಅಣಕಿಸುತ್ತಾ ನಿಲ್ಲುತ್ತವೆ........ ತಪ್ಪು ಯಾರದು ?


..................................................................................................................................
ಮಾಹಿತಿ ಸಹಕಾರ: ಮೈಸೂರಿನ CFTRI ನಲ್ಲಿ ವಿಜ್ಞಾನಿಯಾಗಿ ಕಾರ್ಯನಿರ್ವಹಿಸುತ್ತಿರುವ ನನ್ನ ಆತ್ಮೀಯ ಮಿತ್ರ.

................................................................................................................................


ಕೊನೆಕಿಡಿ:

ನಿತ್ಯವೂ ಮನೆಯಲ್ಲಿ ಶಂಭುಲಿಂಗನದೇ ನಳಪಾಕ.  ಹೀಗೊಮ್ಮೆ ರಾತ್ರಿಯ ಊಟದ ನಂತರ ಶಂಭು ತನ್ನ ಮಗನಿಗೆ ತತ್ವವೊಂದನ್ನು ಹೇಳಿದ
"ಮಗನೇ, ಕೆಟ್ಟದನ್ನು ನಾವು ದೂರವಿಡಬೇಕು " ಎಂದ. ಮರಿಲಿಂಗ ತಲೆಯಾಡಿಸಿದ.
ಶಂಭು ಮತ್ತೆ ಕೇಳಿದ
"ಅರ್ಥವಾಯಿತೇನೋ ನಾನು ಹೇಳೀದ್ದು"
"ಹೂಂ ಅಪ್ಪ " ಮರಿಲಿಂಗ ಹೇಳಿದ
"ಏನೋ ನಾನು ಹೇಳಿದುದರ ಅರ್ಥ ? "
"ನೀನು ಮಾಡುವ ಅಡುಗೆ ತಿನ್ನಬಾರದು ಅಂತ ಅಪ್ಪಾ ! " ....ಅಪ್ಪ ಬೆಪ್ಪನಾದ !.